ಜುಲೈ 12 – ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮಂಗಳೂರಿನಲ್ಲಿ ನಡೆದಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಮೋಹನ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಇಂಟೆಲಿಜೆನ್ಸ್ ಐಜಿಪಿ ಅಮೃತ್ ಪಾಲ್, ಸಿಐಡಿ ವಿಭಾಗದ ಐಜಿಪಿ ಚಂದ್ರಶೇಖರ್, ಪಶ್ಚಿಮ ವಲಯ ಐಜಿಪಿ ಹರಿಶೇಖರನ್, ದಕ್ಷಿಣಕನ್ನಡ ಎಸ್ ಪಿ ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಸೇರಿದಂತೆ ಇನ್ನಿತರ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಸೇರಿದಂತೆ ಬಂಟ್ವಾಳದ ಪರಿಸ್ಥಿತಿಯ ಬಗ್ಗೆ ಸಭೆಯಲ್ಲಿ ಅವಲೋಕನ ನಡೆಸಲಾಯಿತು. ನಾಳೆ ದಕ್ಷಿಣಕನ್ನಡ ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತ ಭೇಟಿ ನೀಡಲಿದ್ದು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕೂಡ ನಡೆಯಲಿದೆ.
12
Jul, 2017