DAKSHINA KANNADA
ಸುಳ್ಳು ಮಾಹಿತಿ ನೀಡಿದ ಸಂಸದೆ ಶೋಭಾ ಕರಂದ್ಲಾಜೆ ರಾಜಿನಾಮೆಗೆ ಐವನ್ ಡಿಸೋಜಾ ಒತ್ತಾಯ..

ಮಂಗಳೂರು,ಜುಲೈ.20 : ಕೇಂದ್ರ ಗೃಹ ಇಲಾಖೆಗೆ ಸಂಸದೆ ಶೋಭಾ ಕರಂದ್ಲಾಜೆ ಬರೆದಿರು ಪತ್ರ ಈಗ ವಿವಾದಕ್ಕೆ ಗುರಿಯಾಗಿದೆ. ಕೇಂದ್ರ ಗೃಹ ಇಲಾಖೆಗೆ ಸಂಸದೆ ಶೋಭಾ ಕರಂದ್ಲಾಜೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸಿದ್ದಾರೆ, ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ ಈ ಹಿನ್ನೆಲೆಯಲ್ಲಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ನ ಮುಖ್ಯ ಸಚೇತಕ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಹತ್ಯೆಗೇಡಾದ ಹಿಂದೂ ಸಂಘಟನೆ, ಆರ್ ಎಸ್ ಎಸ್ ಹಾಗು ಬಿ ಜೆ ಪಿ ಕಾರ್ಯಕರ್ತರ ಪಟ್ಟಿಯನ್ನು ಕೇಂದ್ರ ಗೃಹ ಇಲಾಖೆಗೆ ಶೋಭಾ ಕರಂದ್ಲಾಜೆ ನೀಡಿದ್ದಾರೆ. ಆದರೆ ಪಟ್ಟಿಯಲ್ಲಿ ಜೀವಂತವಾಗಿ ಇರುವವರು ಹಾಗು ಆತ್ಮಹತ್ಯೆ ಮಾಡಿಕೊಂಡಿರುವವರ ಹೆಸರನ್ನು ಸೇರಿಸಿ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಅವರು ಆರೋಪಿಸಿದರು. ದೇಶದ ಜನರನ್ನು ತಪ್ಪುದಾರಿಗೆ ಎಳೆದು ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ್ದಾರೆ ಎಂದು ಅವರು ದೂರಿದರು. ತಪ್ಪು ಮಾಹಿತಿ ನೀಡಿ ಕೇಂದ್ರ ಸರಕಾರವನ್ನು ಹಾಗು ಜನರನ್ನು ವಂಚಿಸಿರುವುದು ಮಹಾ ಅಪರಾಧವಾಗಿದ್ದು ಸಂಸದೆ ಶೋಭಾ ಕರಂದ್ಲಾಜೆ ದೇಶದ ಜನರಲ್ಲಿ ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಬೇಕು ಹಾಗು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಸುಳ್ಳು ಮಾಹಿತಿ ನೀಡಿ ಸಮಾಜವನ್ನು ವಂಚಿಸಿರುವ ಶೋಭಾ ಕರಂದ್ಲಾಜೆ ಅವರ ವಿರುದ್ದ ಕ್ರಿಮಿನಲ್ ದಾವೆ ಹೂಡಲು ಚಿಂತನೆ ನಡೆದಿದೆ ಎಂದು ಹೇಳಿದ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಸಮಾಜವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಮುಂಬರುವ ಚುನಾವಣೆಯಲ್ಲಿ ಅವಕಾಶ ದೊರೆತರೆ ಮುಲ್ಕಿ ಮೂಡಬಿದ್ರೆ ಕ್ಷೇತ್ರ ದಿಂದ ಸ್ಪರ್ಧಿಸುವುದಾಗಿ ಅವರು ತಿಳಿಸಿದರು. ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಟಿಕೇಟ್ ಆಕಾಂಕ್ಷೀ ತಾವಾಗಿದ್ದು ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸುವುದಾಗಿ ಅವರು ತಿಳಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಮತ ಗಟ್ಟಿ, ಗೇರು ಅಭೀವೃದ್ಧಿ ನಿಗಮದ ಅಧ್ಯಕ್ಷ ಬಿ.ಎ. ಖಾದರ್, ಜಿಲ್ಲಾ ಮಾದ್ಯಮ ವಕ್ತಾರ ನಜೀರ್ ಬಜಾಲ್ ಸುದ್ದಿಗೊಷ್ಟಿಯಲ್ಲಿ ಉಪಸ್ಥಿರಿದ್ದರು.