ನಕ್ಸಲ್ ಪೀಡಿತ ಮತಗಟ್ಟೆಗಳಿಗೆ ಡಿಸಿ, ಎಸ್ಪಿ ಭೇಟಿ
ಬೆಳ್ತಂಗಡಿ, ಎಪ್ರಿಲ್ 10 : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಶಿಕಾಂತ್ ಸೆಂಥಿಲ್ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ರವಿಕಾಂತೇ ಗೌಡ ಬೆಳ್ತಂಗಡಿ ತಾಲೂಕಿನ ನಕ್ಸಲ್ ಪೀಡಿತ ಪ್ರದೇಶಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಭಯಮುಕ್ತ ಮತದಾನದ ಅಭಯ ನೀಡಿದರು.

ಬೆಳ್ತಂಗಡಿ ತಾಲೂಕಿನ ಮಲವಂತಿಕೆ ಗ್ರಾಮದ ಕಿಲ್ಲೂರು ಸಮೀಪದ ಕರಿಯಾಳ ಶಾಲೆ ಹಾಗೂ ದಿಡುಪೆಯ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಪೋಲೀಸ್ ವರಿಷ್ಟಾಧಿಕಾರಿಗಳು ಸ್ಥಳೀಯ ಗ್ರಾಮಸ್ಥರೊಂದಿಗೆ ಮಾತುಕತೆಯನ್ನೂ ನಡೆಸಿದರು.

ಯಾವುದೇ ಭಯಭೀತಿಯಿಲ್ಲದೆ ಮತದಾನ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ನಡೆಸಲಿದ್ದು, ನಿರ್ಭೀತಿಯಿಂದ ಮತ ಚಲಾಯಿಸಿ ಎನ್ನುವ ವಿನಂತಿಯನ್ನೂ ಇಬ್ಬರು ಅಧಿಕಾರಿಗಳು ಗ್ರಾಮಸ್ಥರಿಗೆ ನೀಡಿದ್ದಾರೆ.

ಮುಂದಿನ ವಾರ ದಕ್ಷಿಣಕನ್ನಡ ಜಿಲ್ಲೆಯ ಅತ್ಯಂತ ದೂರದ ಮತಗಟ್ಟೆಯಾದ ಎಳನೀರಿಗೂ ಭೇಟಿ ನೀಡುವುದಾಗಿ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.