UDUPI
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ
ಉಡುಪಿ, ಫೆಬ್ರವರಿ 5: ಜಿಲ್ಲೆಯಲ್ಲಿ ಫೆಬ್ರವರಿ 12 ರಂದು ರಾಷ್ಟ್ರೀಯ ಜಂತಹುಳು ನಿವಾರಣಾ ದಿನಾಚರಣೆ ಆಚರಿಸಲಾಗುತ್ತಿದ್ದು, ಒಟ್ಟು 254832 ಮಂದಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
ಮಕ್ಕಳು ಪೌಷ್ಠಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಸಹ ಜಂತುಹುಳುಗಳ ಬಾಧೆಯಿಂದ ಮಕ್ಕಳಲ್ಲಿ ಅಪೌಷ್ಠಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುವುದರಿಂದ , ಬೆಳವಣಿಗೆ ಕುಂಠಿತಗೊಳ್ಳಲಿದೆ , ಆದ್ದರಿಂದ ಜಿಲ್ಲೆಯಲ್ಲಿನ 1 ರಿಂದ 19 ವರ್ಷದೊಳಗಿನ ಎಲ್ಲರಿಗೂ ಜಂತುಹುಳು ನಾಶಪಡಿಸುವ ಆಲ್ಬೆಂಡಝೋಲ್ ಮಾತ್ರೆಗಳನ್ನು ವಿತರಿಸಲಾಗುವುದು ಎಂದು ಸಿಇಓ ತಿಳಿಸಿದರು.
ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಿಗೆ, ಅಂಗನವಾಡಿ ಮಕ್ಕಳಿಗೆ ಮಾತ್ರೆ ವಿತರಿಸುವಂತೆ ಹಾಗೂ ಸುರಕ್ಷಿತ ಕೈ ತೊಳೆಯುವ ವಿಧಾನಗಳ ಬಗ್ಗೆ ಮಾಹಿತಿ ನೀಡುವಂತೆ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಜಂತುಹುಳು ಮಾತ್ರೆಯಿಂದ ವಂಚಿತರಾಗದಂತೆ ತಡೆಯಲು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯ ಪ್ರತಿ ಮನೆಮನೆಗೆ ಮಾತ್ರೆಗಳನ್ನು ತಲುಪಿಸುವಂತೆ ಹಾಗೂ ಈ ಕುರಿತು ನಿಗಾ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ ಸಿಇಓ ಅವರು, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಸ್ತುತ ರಜೆ ಇರುವ ಕಾರಣ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫೆಬ್ರವರಿ 20 ರಂದು ನೆಯುವ ಪರೀಕ್ಷೆಯ ದಿನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫೆಬ್ರ 12 ರಿಂದ 17 ರ ವರೆಗಿನ ಅವಧಿಯಲ್ಲಿ ಸಂಬಂದಪಟ್ಟ ಕಾಲೇಜುಗಳಲ್ಲಿ, ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರಿಂದ ಮಾತ್ರೆಗಳನ್ನು ಪಡೆಯುವಂತೆ ಸಂಬಂದಪಟ್ಟ ಎಲ್ಲಾ ಕಾಲೇಜುಗಳಿಗೆ ಮಾಹಿತಿ ನೀಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
You must be logged in to post a comment Login