ಮಂಗಳೂರು ಅಗಸ್ಟ್ 02: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ದಾಖಲೆ ಸಮೇತ ಕಾನೂನುಬದ್ಧವಾಗಿ ಮಾಹಿತಿ ನೀಡಿದ ವೈದ್ಯ ಹಾಗೂ ಸಾಮಾಜಿಕ ಕಾರ್ಯಕರ್ತರೊಬ್ಬರ ಮೇಲೆಯೇ ಎಫ್ಐಆರ್ ದಾಖಲಿಸಿ ಕಿರುಕುಳ ನೀಡಿದ ಕಾಂಗ್ರೆಸ್ ಸರ್ಕಾರ, ಕೇವಲ ವೋಟ್ ಬ್ಯಾಂಕ್ ಗಾಗಿ ರಾಜ್ಯದ ಹಾಗೂ ದೇಶದ ಭದ್ರತೆಯನ್ನೂ ಕಡೆಗಣಿಸಿರುವುದು ಆತಂಕಕಾರಿ ಸಂಗತಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಕಳವಳ ವ್ಯಕ್ತಪಡಿಸಿದರು.

ಇಂದು ಇಡೀ ಜಗತ್ತು ಅಕ್ರಮ ವಲಸೆಗಳಿಂದ ಯಾವ ರೀತಿಯ ಸಮಸ್ಯೆ ಎದುರಿಸುತ್ತಿದೆ ಎಂಬುದಕ್ಕೆ ಸ್ಪೇನ್ ಸೇರಿದಂತೆ ಯುರೋಪ್ ರಾಷ್ಟ್ರಗಳ ಉದಾಹರಣೆ ಕಣ್ಣ ಮುಂದಿದೆ. ಹೀಗಿರುವಾಗ ದೇಶದ ಭದ್ರತೆಯ ವಿಚಾರ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಅಕ್ರಮ ವಲಸಿಗರ ಮಾಹಿತಿ ನೀಡಿದರೆ ರಾಜ್ಯದ ನಾಗರೀಕನ ಮೇಲೆಯೇ ಪ್ರಕರಣ ದಾಖಲಿಸಿರುವುದು ಗಂಭೀರ ಸಂಗತಿ. ಆ ಮೂಲಕ ಕಾಂಗ್ರೆಸ್ ಆಡಳಿತದಲ್ಲಿ ಅಕ್ರಮ ವಲಸಿಗರಿಗೆ ಸುರಕ್ಷಿತ ವಾತಾವರಣ ಸೃಷ್ಟಿಸಲಾಗಿದೆ. ಈ ಬಗ್ಗೆ ಮಾನ್ಯ ಹೈಕೋರ್ಟ್ ಮಧ್ಯ ಪ್ರವೇಶಿಸಿ, ನಿಮ್ಮ ಓಲೈಕೆಯನ್ನು ನಿಲ್ಲಿಸಿ ರಾಷ್ಟ್ರೀಯ ಭದ್ರತೆಯ ವಿಷಯಗಳಲ್ಲಿ ಗಂಭೀರವಾಗಿ ಕಾರ್ಯನಿರ್ವಹಿಸಿ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಪ್ರಕರಣಕ್ಕೆ ತಡೆ ನೀಡಿರುವುದು ಸ್ವಾಗತಾರ್ಹ ಎಂದರು.
ಸದ್ಯ ರಾಜ್ಯದಲ್ಲಿ ತುಘಲಕ್ ಆಡಳಿತ ನಡೆಯುತ್ತಿದ್ದು, ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನಸಾಮಾನ್ಯರನ್ನು ಬೆದರಿಸಲಾಗುತ್ತಿದೆ. ದ್ವೇಷ ಭಾಷಣದ ಹೆಸರಿನಲ್ಲಿ ಸಿ.ಟಿ ರವಿ, ಯಶ್ಪಾಲ್ ಸುವರ್ಣ ರಂತಹ ಬಿಜೆಪಿ ನಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ. ಈ ಹಿಂದೆ ನನ್ನ ಮೇಲೆಯೂ ದಾಖಲಿಸಿದ್ದ ಸುಳ್ಳು ಪ್ರಕರಣವನ್ನು ಇತ್ತೀಚಿಗೆ ಹೈಕೋರ್ಟ್ ಖುಲಾಸೆಗೊಳಿಸಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದರು.