ಮಂಗಳೂರು ಮಾರ್ಚ್ 20: ರಾಜ್ಯಾದ್ಯಂತ ಸುದ್ದಿಯಾಗಿದ್ದ ಮೂಡಬಿದಿರೆಯ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರ ವಿರುದ್ದ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು. ಈ ಕುರಿತು ನಡೆಸಲಾದ ಸಮಗ್ರ ಪ್ರಾಥಮಿಕ ತನಿಖೆಯಲ್ಲಿ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಅವರು ಮಾಡಿದ ದೂರುಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದೂರುದಾರರಾದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಅವರು ನೀಡಿದ ದೂರುಗಳು ದುರುದ್ದೇಶ ಪ್ರೇರಿತವಾಗಿದ್ದು, ಅಧಿಕಾರಿಯನ್ನು ಸಿಲುಕಿಸುವ ಉದ್ದೇಶ ಹೊಂದಿದ್ದವು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಪೂರಕ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವಿಡಿಯೋಗಳಲ್ಲಿರುವ ಮಹಿಳೆಯರು ಅವುಗಳು ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಅವರು ಅಧಿಕಾರಿಯ ವಿರುದ್ಧ ಯಾವುದೇ ಅಧಿಕೃತ ದೂರು ನೀಡಲು ನಿರಾಕರಿಸಿದ್ದಾರೆ. ಈ ವಿಡಿಯೋಗಳನ್ನು ವಿನೋದ್ ಪಿಂಟೋ ಮತ್ತು ಇತರರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಬಳಸಿಕೊಂಡಿದ್ದಾರೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.
ಅಧಿಕಾರಿಯ ಮೇಲೆ ಹೊರಿಸಲಾದ ಪ್ರಸಕ್ತ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳಾಗಿದ್ದರೂ, ಆಡಿಯೋ ಮತ್ತು ವಿಡಿಯೋಗಳಲ್ಲಿ ಕಂಡುಬಂದಿರುವ ಅವರ ನೈಜ ದುರ್ನಡತೆಯನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಯ ಹಳೆಯ ತಪ್ಪುಗಳ ಹಿನ್ನೆಲೆಯಲ್ಲಿ ಈಗಾಗಲೇ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಠಾಣೆಗೆ ಬರುವ ಮಹಿಳೆಯರ ರಕ್ಷಣೆ ಮತ್ತು ಅವರೊಂದಿಗೆ ಗೌರವಯುತವಾಗಿ ವರ್ತಿಸುವುದು ಪೊಲೀಸರ ಆದ್ಯ ಕರ್ತವ್ಯ. ಈ ಘಟನೆಯಿಂದ ಇಡೀ ಇಲಾಖೆಗೆ ಪಾಠವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ವರ್ತನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು. ಅದೇ ವೇಳೆ, ವೈಯಕ್ತಿಕ ದ್ವೇಷಕ್ಕಾಗಿ ಸುಳ್ಳು ದೂರುಗಳನ್ನು ನೀಡಿ ತನಿಖೆಯ ಹಾದಿ ತಪ್ಪಿಸುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಮಿಷನರ್ ರೆಡ್ಡಿ ಎಚ್ಚರಿಸಿದ್ದಾರೆ