ಬಾಗಲಕೋಟೆ, ಏಪ್ರಿಲ್ 23: ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಸ್ಪೀಟ್ ಆಟಗಾರರ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಬುಧವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭ್ರಷ್ಟ ಅಧಿಕಾರಿಗಳ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕೆರೂರು ಪಟ್ಟಣದ ಯುವಕರು ಹಾಗೂ ಸಾರ್ವಜನಿಕರು ಠಾಣೆಯ ಮುಂಭಾಗದಲ್ಲೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿರುವುದು ವ್ಯವಸ್ಥೆಯ ವಿರುದ್ಧದ ಜನರ ಆಕ್ರೋಶಕ್ಕೆ ಸಾಕ್ಷಿಯಾಗಿದೆ.

ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್ ಬಿರಾದಾರ ಬಂಧಿತ ಆರೋಪಿಗಳಾಗಿದ್ದಾರೆ. ಇಸ್ಪೀಟ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದ ಬೈಕ್ ಬಿಡುಗಡೆ ಮಾಡಲು ಹಾಗೂ ಆರೋಪಿಯನ್ನು ಪ್ರಕರಣದಿಂದ ರಕ್ಷಿಸಲು ಇಬ್ಬರೂ ಅಧಿಕಾರಿಗಳು ಮುತ್ತಪ್ಪ ನಾಯ್ಕರ್ ಎಂಬುವವರಿಂದ ₹2 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮುತ್ತಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತ ಎಸ್ಪಿ ಮಹಾಲಿಂಗ ನಂದಗಾವಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ₹1.70 ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಕಂಗಾಲಾಗುವಂತೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತರಿಂದ ಲಂಚದ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಪಿಎಸ್ಐ ಭೀಮಪ್ಪ ರಬಕವಿ ಅವರು ಕೆರೂರು ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಜನಸಾಮಾನ್ಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಣ್ಣಪುಟ್ಟ ಕೆಲಸಗಳಿಗೂ ಹಣಕ್ಕೆ ಪೀಡಿಸುವುದು ಮತ್ತು ಬಡ ರೈತರ ಬೈಕ್ಗಳನ್ನು ವಶಪಡಿಸಿಕೊಂಡು ಬೆದರಿಸುವುದು ಇವರ ನಿತ್ಯದ ಕಾಯಕವಾಗಿತ್ತು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದೇ ಕಾರಣಕ್ಕೆ ಲೋಕಾಯುಕ್ತ ದಾಳಿ ನಡೆದ ಕೂಡಲೇ ಪಟ್ಟಣದ ಯುವಕರು ರಸ್ತೆಗಿಳಿದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಘಟನೆಯ ನಂತರ ಠಾಣೆಯ ಮುಂದೆ ಜಮಾಯಿಸಿದ ನೂರಾರು ಸಾರ್ವಜನಿಕರು, ಬಂಧಿತ ಅಧಿಕಾರಿಗಳು ಈ ಹಿಂದೆ ಎಸಗಿದ್ದ ಹತ್ತಾರು ಅಕ್ರಮಗಳ ಬಗ್ಗೆ ಸಾಕ್ಷಿ ನೀಡಲು ಮುಂದಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಎಲ್ಲ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದ ಘಟನೆಯೂ ನಡೆಯಿತು. ಸದ್ಯ ಬಂಧಿತ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಸುತ್ತಿದ್ದಾರೆ.