ಬೆಂಗಳೂರು, ಮಾರ್ಚ್ 18: ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೋಚಕ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ದರೋಡೆ ಮಾಡಲಾಗಿದ್ದ ಹಣದ ಪೈಕಿ 10 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ನಿಖಿಲ್, ಪ್ರಶಾಂತ್ ಅಲಿಯಾಸ್ ಪಿಂಕಿ, ಅರುಣ್ ಕುಮಾರ್, ಹರೀಶ್ ಮತ್ತು ಈ ಕೃತ್ಯದ ಮಾಸ್ಟರ್ ಮೈಂಡ್ ರಕ್ಷಿತ್ ಎಂದು ಗುರುತಿಸಲಾಗಿದೆ.
ಶ್ರೀ ಕೈಲಾಸ್ ಎಂಬುವವರು ‘ಉಡಾನ್’ (Udaan) ಕಂಪನಿಯಲ್ಲಿ ಹಣ ಸಂಗ್ರಹಣೆ (Collection) ಮಾಡುವ ಕೆಲಸ ಮಾಡುತ್ತಿದ್ದರು. ಫೆಬ್ರವರಿ 1ರಂದು ಅವರು ಸುಮಾರು 31,38,625 ರೂಪಾಯಿಗಳನ್ನು ಸಂಗ್ರಹಿಸಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ಮಾಹಿತಿ ಅರಿತಿದ್ದ ಆರೋಪಿಗಳು ಎರಡು ಬೈಕ್ಗಳಲ್ಲಿ ಕೈಲಾಸ್ ಅವರನ್ನು ಹಿಂಬಾಲಿಸಿದ್ದರು. ನಿರ್ಜನ ಪ್ರದೇಶದಲ್ಲಿ ಸಿನಿಮೀಯ ಮಾದರಿಯಲ್ಲಿ ಬೈಕ್ ಅಡ್ಡಗಟ್ಟಿದ ದರೋಡೆಕೋರರ ತಂಡ, ಲಾಂಗ್ನಿಂದ ಹಲ್ಲೆ ನಡೆಸಿ ಹಣದ ಚೀಲ ಹಾಗೂ ಬೈಕ್ ಅನ್ನು ಕಿತ್ತುಕೊಂಡು ಪರಾರಿಯಾಗಿತ್ತು. ಸ್ವಲ್ಪ ದೂರ ಸಾಗಿದ ಬಳಿಕ ಸಾಕ್ಷ್ಯ ನಾಶಪಡಿಸಲು ಬೈಕ್ ಅನ್ನು ರಸ್ತೆಯಲ್ಲೇ ಬಿಟ್ಟು ಹಣದೊಂದಿಗೆ ಪರಾರಿಯಾಗಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಡಿವೈಎಸ್ಪಿ ಮೋಹನ್, ಇನ್ಸ್ಪೆಕ್ಟರ್ಗಳಾದ ಕೃಷ್ಣಕುಮಾರ್ ಹಾಗೂ ಮಂಜುನಾಥ್ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿದ್ದರು. ತನಿಖೆಯ ವೇಳೆ ಸಂತ್ರಸ್ತ ಕೈಲಾಸ್ ಅವರಿಗೆ ಪರಿಚಿತರಾದವರೇ ಈ ಕೃತ್ಯ ಎಸಗಿರುವ ಬಗ್ಗೆ ಬಲವಾದ ಶಂಕೆ ವ್ಯಕ್ತವಾಗಿತ್ತು.
ಅದರಂತೆ ಕೈಲಾಸ್ಗೆ ಹಣ ನೀಡಿದ್ದ ಉಡಾನ್ ಕಂಪನಿಯ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದಾಗ, ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಕ್ಷಿತ್ ಅಸಲಿ ಸಂಚುಕೋರ ಎಂಬುದು ಬೆಳಕಿಗೆ ಬಂದಿದೆ. ಕೈಲಾಸ್ ಅವರು ಪ್ರತಿದಿನ ಲಕ್ಷಾಂತರ ರೂಪಾಯಿ ಹಣದೊಂದಿಗೆ ಓಡಾಡುವುದನ್ನು ಗಮನಿಸಿದ್ದ ರಕ್ಷಿತ್, ಸುಲಭವಾಗಿ ಹಣ ಗಳಿಸುವ ಹಪಾಹಪಿಯಿಂದ ತನ್ನ ಸ್ನೇಹಿತರೊಂದಿಗೆ ಸೇರಿ ಈ ದರೋಡೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದನು. ಪೊಲೀಸರ ಚಾಣಾಕ್ಷ ತನಿಖೆಯಿಂದಾಗಿ ಈಗ ಐವರು ಆರೋಪಿಗಳು ಕಂಬಿ ಎಣಿಸುವಂತಾಗಿದೆ. ಇವರಿಂದ 10 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಲಾಗಿದ್ದು, ಉಳಿದ ಹಣದ ಪತ್ತೆಗಾಗಿ ವಿಚಾರಣೆ ಮುಂದುವರಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.