Connect with us

    LATEST NEWS

    ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಮಾನಹಾನಿಕರ ಪೋಸ್ಟ್‌ ಪ್ರಕರಣ ಕೆ. ಸೋಮನಾಥ ನಾಯಕ್‌ ಶಿಕ್ಷೆ ಎತ್ತಿ ಹಿಡಿದ ಸುಪ್ರೀಂಕೋರ್ಟ್

    ಮಂಗಳೂರು ಅಕ್ಟೋಬರ್ 26: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಂತೆ ಗೌರವ ಚ್ಯುತಿ ತರುವ ಹೇಳಿಕೆ ಪ್ರಕಟಿಸಿದ ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸೋಮನಾಥ್‌ ನಾಯಕ್‌ ಅವರಿಗೆ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದೆ.


    ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕ್ಷೇತ್ರದ ಸಂಸ್ಥೆಗಳ ಗೌರವಕ್ಕೆ ಚ್ಯುತಿ ಬರುವಂತಹ ಹೇಳಿಕೆ ನೀಡಬಾರದು ಎಂದು ಬೆಳ್ತಂಗಡಿ ಜೆಎಂಎಫ್‌ ನ್ಯಾಯಾಲಯವು 2013ರ ನ.5ರಂದು ಸೋಮನಾಥ ನಾಯಕ್ ಮತ್ತು ಇತರ ಐವರ ವಿರುದ್ಧ ನಿರ್ಬಂಧ ಹೇರಿತ್ತು. ಆ ಬಳಿಕವೂ ನಾಯಕ್ ಸಾಮಾಜಿಕ ಜಾಲತಾಣಗಳಲ್ಲಿ ಹೆಗ್ಗಡೆ ವಿರುದ್ಧ ಆರೋಪಗಳನ್ನು ಮಾಡಿದ್ದರು. ಈ ಬಗ್ಗೆ ಹೆಗ್ಗಡೆ ಅವರು ನೀಡಿದ್ದ ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಸೋಮನಾಥ ನಾಯಕ್ ದೋಷಿ ಎಂದು ಪರಿಗಣಿಸಿ, ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ದೂರುದಾರರಿಗೆ ₹ 4.5 ಲಕ್ಷ ಪರಿಹಾರ ನೀಡಬೇಕು. ಇದಕ್ಕಾಗಿ ಆಸ್ತಿಯನ್ನೂ ಮುಟ್ಟುಗೋಲು ಹಾಕಬಹುದು ಎಂದು ಆದೇಶಿಸಿತ್ತು.

    ಈ ತೀರ್ಪಿನ ವಿರುದ್ಧ ನಾಯಕ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಬೆಳ್ತಂಗಡಿಯ ಜೆಎಂಎಫ್‌ಸಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು 2021 ಜೂನ್‌ 8ರಂದು ಕೆಳ ನ್ಯಾಯಾಲಯದ ತೀರ್ಪನ್ನು ಕಾಯಂಗೊಳಿಸಿ ತೀರ್ಪು ನೀಡಿದ್ದರು. ಅದರ ವಿರುದ್ಧವೂ ನಾಯಕ್‌ ಮೇಲ್ಮನವಿ ಸಲ್ಲಿಸಿದ್ದರು. ‘ನಾಯಕ್ ಅವರ ಮೇಲ್ಮನವಿಯಲ್ಲಿ ನಿಜಾಂಶ ಇಲ್ಲ’ ಎಂದು 2022 ಮಾರ್ಚ್‌ 22ರಂದು ಬೆಳ್ತಂಗಡಿಯ ಜೆಎಂಎಫ್‌ಸಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ತೀರ್ಪು ನೀಡಿದ್ದರು. ನಾಯಕ್ ದಸ್ತಗಿರಿಗೆ 2022ರ ಮಾರ್ಚ್ 31ರಂದು ಆದೇಶವಾಗಿತ್ತು. ತೀರ್ಪನ್ನು ಪ್ರಶ್ನಿಸಿ ಕರ್ನಾಟಕದ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದ ನಾಯಕ್‌, ‘ತನ್ನನ್ನು ಬಂಧಿಸದಂತೆ ತಡೆಯಾಜ್ಞೆ ನೀಡಬೇಕು ಹಾಗೂ ವಿಚಾರಣಾ ನ್ಯಾಯಾಲಯದ ಆದೇಶ ವಜಾ ಮಾಡಬೇಕು‘ ಎಂದು ಕೋರಿದ್ದರು. ‘ವಿಚಾರಣಾ ನ್ಯಾಯಾಲಯಗಳ ಆದೇಶ ಸಮಂಜಸವಾಗಿದೆ. ಈ ಪ್ರಕರಣದ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯವಿಲ್ಲ’ ಎಂದು ಹೈಕೋರ್ಟ್‌ 2022ರ ಮೇ 5ರಂದು ತೀರ್ಪು ನೀಡಿತ್ತು. ಇದನ್ನು ನಾಯಕ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಅ.19ರಂದು ತಿರಸ್ಕರಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply