KARNATAKA
ಬೆಂಗಳೂರು ಕಾಲ್ತುಳಿತ ಪ್ರಕರಣ: ಮೂವರು ಆಯೋಜಕರ ಬಂಧನ

ಬೆಂಗಳೂರು, ಜೂನ್ 06: ನಗರದಲ್ಲಿ ಕಾಲ್ತುಳಿತದಿಂದ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ನಿನ್ನೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆಯೋಜಕರನ್ನು ಬಂಧಿಸಿದ್ದು, ಓರ್ವವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮೂವರು ಆಯೋಜಕರನ್ನು ಬಂಧಿಸಿದ್ದಾರೆ.

ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಮತ್ತು ಕಿರಣ್ ಬಂಧಿತರು. ಮತ್ತೋರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದ್ದಾರೆ.