ಬೆಂಗಳೂರು, ನವೆಂಬರ್​​ 23: ಲೈಂಗಿಕ ಸಮಸ್ಯೆ ಪರಿಹಾರಕ್ಕೆ ರಸ್ತೆ ಬದಿ ಟೆಂಟ್‌ ಹಾಕಿ ಇರುವ ಆಯುರ್ವೇದ ಪಂಡಿತರ ಬಳಿಹೋಗಿ ಟೆಕ್ಕಿಯೊಬ್ಬ ಬರೋಬ್ಬರಿ 48 ಲಕ್ಷ ಕಳೆದುಕೊಂಡಿದಲ್ಲದೇ , ಅವರ ಚಿಕಿತ್ಸೆಯಿಂದಾಗಿ ಕಿಡ್ನಿಗೆ ಸಮಸ್ಯೆ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಸಂತ್ರಸ್ತ ಟೆಕ್ಕಿ ಪೊಲೀಸರ ಮೊರೆ ಹೋಗಿದ್ದಾರೆ. ಘಟನೆ ಸಂಬಂಧ ವಿಜಯ್ ಗೂರೂಜಿ ಎಂಬವರು ಸೇರಿ ವಿಜಯಲಕ್ಷ್ಮೀ ಆಯುರ್ವೇದಿಕ್ ಶಾಪ್​​ ವಿರುದ್ಧ ಪ್ರಕರಣ ದಾಖಲಾಗಿದೆ.


ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದ ಟೆಕ್ಕಿ ತೇಜಸ್​​ ಎಂಬವರು ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಅಲ್ಲಿನ ಚಿಕಿತ್ಸೆಯಿಂದ ಅವರಿಗೆ ಫಲಿತಾಂಶ ಸಿಕ್ಕಿರಲಿಲ್ಲ. ಇದರಿಂದಾಗಿ ಆ ಆಸ್ಪತ್ರೆಯ ಎದುರಗಡೆ ರಸ್ತೆಯ ಪಕ್ಕದ ಟೆಂಟ್ ಬಳಿ ಹಾಕಲಾಗಿದ್ದ ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಬೋರ್ಡ್​ ಗಮನಿಸಿದ್ದ ತೇಜಸ್​ ಅಲ್ಲಿಗೂ ಭೇಟಿ ನೀಡಿದ್ದರು. ಆ ವೇಳೆ ಅಲ್ಲಿದ್ದಾತ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇನೆಂದು ಟೆಕ್ಕಿಗೆ ಭರವಸೆ ನೀಡಿದ್ದಾನೆ. 1 ಗ್ರಾಂ ಔಷಧಿಗೆ 1,60,000 ರೂ. ಬೆಲೆ ಇರುವ ದೇವರಾಜ್ ಬೂಟಿ ಹೆಸರಿನ ಔಷಧವನ್ನು ಯಶವಂತಪುರದ ವಿಜಯಲಕ್ಷ್ಮೀ ಆಯುರ್ವೇದಿಕ್​​ ಶಾಪ್​ನಲ್ಲಿ ಮಾತ್ರ ಖರೀದಿಸಬೇಕೆಂದು ಒತ್ತಾಯ ಮಾಡಿದ್ದಾನೆ. ಅಲ್ಲದೆ ಆನ್‌ಲೈನ್ ಪೇಮೆಂಟ್ ಬೇಡ, ಯಾರ ಜೊತೆಗೆ ಬರಬಾರದೆಂದು ಷರತ್ತು ವಿಧಿಸಿದ್ದ ಎನ್ನಲಾಗಿದೆ.

ReadThis – ಸ್ಮೃತಿ ಮಂಧಾನ ತಂದೆಗೆ ಹೃದಯಾಘಾತ – ಇಂದು ನಡೆಯಬೇಕಿದ್ದ ಮದುವೆ ಮುಂದೂಡಿಕೆ

ಆತ ನೀಡಿದ್ದ ಸಲಹೆಯಂತೆ ತೇಜಸ್​​ ಹಲವು ಬಾರಿ ದೇವರಾಜ್ ಬೂಟಿ & ಭವನ ಬೂಟಿ ತೈಲ ಖರೀದಿಸಿದ್ದರು. ಒಟ್ಟು 17 ಲಕ್ಷ ರೂ.ಗಳನ್ನು ಔಷಧಕ್ಕಾಗಿ ಖರ್ಚು ಮಾಡಿದ್ದರು. ಆ ಬಳಿಕ ಹಣದ ಕೊರತೆಯಿಂದ HDFC ಬ್ಯಾಂಕ್ ಖಾತೆಯಲ್ಲಿ 20 ಲಕ್ಷ ರೂ. ಲೋನ್ ಪಡೆದು ಒಟ್ಟು 18 ಗ್ರಾಂ ಔಷಧ ಖರೀದಿಸಿದ್ದರು. ಸಮಸ್ಯೆ ಇದ್ದಾಗ ಬರದಿದ್ದರೆ ಮತ್ತಷ್ಟು ಸಮಸ್ಯೆ ಆಗುವುದಾಗಿ ಆರೋಪಿಗಳು ತೇಜಸ್​​ಗೆ ಬೆದರಿಕೆ ಹಾಕಿದ್ದು, ಕೊನೆಗೆ ಆರೋಗ್ಯ ಸಮಸ್ಯೆಯಿಂದ ರಕ್ತ ಪರೀಕ್ಷೆ ಮಾಡಿಸಿದಾಗ ಕಿಡ್ನಿಗೆ ಸಮಸ್ಯೆ ಆಗಿರುವುದು ಪತ್ತೆಯಾಗಿದೆ. ಆ ಬಳಿಕ ಎಚ್ಚೆತ್ತ ತೇಜಸ್​​ ಆಯುರ್ವೇದ ಚಿಕಿತ್ಸೆ ಹೆಸರಲ್ಲಿ ತನಗೆ ವಂಚನೆ ಮಾಡಿದ ವಿಜಯ್ ಗೂರೂಜಿ, ವಿಜಯಲಕ್ಷ್ಮೀ ಆಯುರ್ವೇದಿಕ್ ವಿರುದ್ಧ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.

Share Information