ಬೆಂಗಳೂರು, ಮಾರ್ಚ್ 26: ಶಾಲೆಗೆ ತೆರಳುತ್ತಿದ್ದ 13 ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ವಿಜಯ್ (13) ಎಂದು ಗುರುತಿಸಲಾಗಿದೆ. ಈತ ಬಿಡದಿಯ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಶಾಲೆಗೆ ಹೋಗುತ್ತಿದ್ದ ವೇಳೆ ಲಾರಿ ಬಾಲಕನ ಮೇಲೆ ಹರಿದಿದ್ದು, ಘಟನೆಯ ತೀವ್ರತೆಯಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಸ್ಥಳೀಯರು ಆಕ್ರೋಶಗೊಂಡು ಲಾರಿ ಚಾಲಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೂಡ ನಡೆದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿಜಯ್ ಕುಟುಂಬವು ಬಿಲ್ಲಕೆಂಪನಹಳ್ಳಿ ಸಮೀಪ ವಾಸವಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವರು ಎಂದು ಹೇಳಲಾಗಿದೆ.