ಮಂಗಳೂರು ಎಪ್ರಿಲ್ 04: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬಂಟ್ಸ್ ಹಾಸ್ಟೆಲ್ ಸರ್ಕಲ್ ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಚೆಂಡೆ, ಬ್ಯಾಂಡ್ ವಾದ್ಯದೊಂದಿಗೆ ಹೊರಟ ಮೆರವಣಿಗೆಯು ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಮಾರ್ಗವಾಗಿ ಪುರಭವನದ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆ ಹೊರಡುವ ಪೂರ್ವದಲ್ಲಿ ವಂದೇ ಮಾತರಂ ಗೀತೆ ಹಾಡಲಾಯಿತು.
ತೆರೆದ ವಾಹನದಲ್ಲಿ ಸಾಗಿದ ಬೃಜೇಶ್ ಚೌಟ ಅವರ ಜೊತೆ ಪಕ್ಷದ ಪ್ರಮುಖ ರಾದ ಸುನಿಲ್ ಕುಮಾರ್, ಸಿ.ಟಿ. ರವಿ, ಸಂಸದ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು. ಮೆರವಣಿಗೆಯುದ್ದಕ್ಕೂ ಬಿಜೆಪಿ ಧ್ಚಜದೊಂದಿಗೆ ಜೆಡಿಎಸ್ ಧ್ವಜವೂ ಹಾರಾಡಿತು. ತುಳುನಾಡಿನ ಧ್ವಜವೂ ಹಾರಾಡಿದ್ದು ವಿಶೇಷವಾಗಿತ್ತು.