ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ವಿರುದ್ದ ಮಾನನಷ್ಟ ದೂರು ದಾಖಲು
ಮಂಗಳೂರು ಜನವರಿ 9: ಇತ್ತೀಚೆಗೆ ಸುರತ್ಕಲ್ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್,ಡಿ ಕುಮಾರ ಸ್ವಾಮಿ ವಿರುದ್ದ ಮಂಗಳೂರಿನಲ್ಲಿ ಮಾನನಷ್ಟ ದೂರು ನೀಡಲಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಸ್ಥಳೀಯ ಕಾರ್ಪೋರೇಟರ್ ಒಬ್ಬರ ಕೈವಾಡ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.
ಈ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರು ಉತ್ತರ ಕ್ಷೇತ್ರ ಅಧ್ಯಕ್ಷ ಡಾ. ಭರತ್ ಶೆಟ್ಟಿ ದಕ್ಷಿಣಕನ್ನಡ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ಕುಮಾರಸ್ವಾಮಿ ವಿರುದ್ದ ಮಾನನಷ್ಟ ದೂರು ದಾಖಲಿಸಿದ್ದಾರೆ.