ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ ಬಿಎಸ್ಎನ್ಎಲ್ ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್ಎನ್ಎಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗೋದಿಲ್ಲ. ಈಗಾಗಲೇ 85 ಸಾವಿರ ಅಧಿಕಾರಿಗಳನ್ನು ಮನೆಗೆ ಕಳುಹಿಸಿದ್ದೇವೆ, ಮುಂದಿನ ದಿನಗಳಲ್ಲಿ ಮತ್ತಷ್ಟು ನೌಕರರನ್ನು ಮನೆಗೆ ಕಳುಹಿಸುತ್ತೇವೆ ಎಂದರು.

ಎಲ್ಲ ಸೌಕರ್ಯಗಳಿದ್ದರೂ ಸಂಸ್ಥೆಯ ನೌಕರರು ಕೆಲಸ ಮಾಡುವುದಿಲ್ಲ, ಮುಂದಿನ ದಿನಗಳಲ್ಲಿ ಬಿಎಸ್ಎನ್ಎಲ್ ಸಂಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದಿದ್ದಾರೆ. ಬಿಎಸ್ಎನ್ಎಲ್ ಎಂಬ ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಎಂದು ಹೇಳುವ ಮೂಲಕ ತಮ್ಮದೇ ಸರ್ಕಾರದ ಅಧೀನದಲ್ಲಿರುವ ಬಿಎಸ್ಎನ್ಎಲ್ ಸಂಸ್ಥೆ ವಿರುದ್ಧ ಹರಿಹಾಯ್ದಿದ್ದಾರೆ.