LATEST NEWS
ಉಗ್ರರ ವಿರುದ್ದ ಹೋರಾಡಿ ಹುತಾತ್ಮರಾದ ಕರಾವಳಿಯ ವೀರ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್

ಮಂಗಳೂರು ನವೆಂಬರ್ 23: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ.
63–ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರು ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ಸ್ ಲಿಮಿಟೆಡ್ನ (ಎಂಆರ್ಪಿಎಲ್) ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಪ್ರಾಂಜಲ್, ಎಂಆರ್ಪಿಎಲ್ನ ದೆಹಲಿ ಪಬ್ಲಿಕ್ ಸ್ಕೂಲ್ ಹಳೆ ವಿದ್ಯಾರ್ಥಿ.

ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್. ಎಂಆರ್ಪಿಎಲ್ ಡೆಲ್ಲಿ ಸ್ಕೂಲ್ ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು.
ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು ಪ್ರಾಂಜಲ್ ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ. ಇದೀಗ ಯೋಧ ಪ್ರಾಂಜಲ್ ಅವರ ಸಾವು ಕುಟುಂಬಸ್ಥರನ್ನು ದಿಗ್ಭ್ರಮೆಗೊಳಿಸಿದೆ. 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿರುವ ಪ್ರಾಂಜಲ್, ಬುಧವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ವೀರಮರಣ ಹೊಂದಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಾಂಜಲ್ ಜೊತೆಗೆ 9 ಪಿಎಆರ್ಎ ಕ್ಯಾಪ್ಟನ್ ಶುಭಂ, ಮತ್ತು ಹವಾಲ್ದಾರ್ ಮಜೀದ್ ಮೃತರಾಗಿದ್ದಾರೆ.
ಐದರಿಂದ ಆರು ಮಂದಿ ಇರುವ ಉಗ್ರರ ಗುಂಪು ದಾಳಿ ಮಾಡಿದ್ದು ಉಗ್ರರ ಬೇಟೆಗೆ ಭಾರತೀಯ ಸೇನೆ ಕಾರ್ಯಾಚರಣೆಗೆ ಇಳಿದಿದೆ. ಈ ವೇಳೆ ಈ ಘಟನೆ ಸಂಭವಿಸಿದೆ. ಪ್ರಾಂಜಲ್ ಸಾವಿನ ಹಿನ್ನಲೆಯಲ್ಲಿ ಎಂಆರ್ಪಿಎಲ್ ಡೆಲ್ಲಿ ಶಾಲೆಗೆ ಗುರುವಾರ ರಜೆ ಘೋಷಿಸಲಾಗಿದೆ. ಶಾಲೆಯಲ್ಲಿ ಎಲ್ಲರ ಅಚ್ಚುಮೆಚ್ಚಿನ ವಿದ್ಯಾರ್ಥಿಯಾಗಿದ್ದು , ಓದಿನಲ್ಲೂ ಪ್ರಾಂಜಲ್ ಮುಂದಿದ್ದ ಎಂದು ಶಾಲೆಯ ಶಿಕ್ಷಕಿಯರು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ.