DAKSHINA KANNADA
ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ..!
ಉಳ್ಳಾಲ, ಜೂನ್ 02: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ಪೊಲೀಸ್ ವಶದಲ್ಲಿರುವ ಆರೋಪಿಗಳಾಗಿದ್ದಾರೆ.
ಈ ನಾಲ್ವರು ಹಿಂದೂ ಸಂಘಟನೆ ಕಾರ್ಯಕರ್ತರಾಗಿದ್ದಾರೆಂದು ತಿಳಿದುಬಂದಿದೆ. ಮೂವರು ಕೇರಳ ಗಡಿಭಾಗ ತಲಪಾಡಿ ಅವರಾಗಿದ್ದರೆ, ಓರ್ವ ಉಳ್ಳಾಲ ಬಸ್ತಿಪಡ್ಪು ನಿವಾಸಿಯಾಗಿದ್ದಾನೆ.
ಕೇರಳ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರ ಮೂಲದ ಮುಜೀಬ್ , ಆಶಿಕ್ ಹಲ್ಲೆಗೊಳಗಾದ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ವಿಹಾರಕ್ಕಾಗಿ ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು.
ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಪ್ರಕರಣದ ವಿಚಾರಣೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಇದೀಗ ತಂಡ ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಗಾಯಗೊಂಡ ಯುವಕರ ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.
You must be logged in to post a comment Login