Connect with us

    KARNATAKA

    ಚಿಕ್ಕಬಳ್ಳಾಪುರ: ಮಳೆಗಾಗಿ ಮಕ್ಕಳ ಮದುವೆ…!

    ಚಿಕ್ಕಬಳ್ಳಾಪುರ, ಆಗಸ್ಟ್ 31: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಇದೀಗ ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

    ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ.

    ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ.

    ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ.
    Share Information
    Advertisement
    Click to comment

    You must be logged in to post a comment Login

    Leave a Reply