Connect with us

LATEST NEWS

ನಿರ್ಲಕ್ಷಿತ ಮಕ್ಕಳೇ ಅಪರಾಧ ಪ್ರಕರಣದಲ್ಲಿ ಭಾಗಿ- ನ್ಯಾ.ಲಾವಣ್ಯ

ನಿರ್ಲಕ್ಷಿತ ಮಕ್ಕಳೇ ಅಪರಾಧ ಪ್ರಕರಣದಲ್ಲಿ ಭಾಗಿ- ನ್ಯಾ.ಲಾವಣ್ಯ

ಉಡುಪಿ, ಡಿಸೆಂಬರ್ 22 : ಸಮಾಜದಲ್ಲಿ ಪೋಷಕರಿಂದ, ಕುಟುಂಬದಿಂದ, ಶಾಲೆಗಳಿಂದ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಿಂದ ನಿರ್ಲಕ್ಷಕ್ಕೆ ಒಳಗಾಗುವ ಮಕ್ಕಳೇ ಮುಂದೆ ಕಾನೂನು ಸಂಘರ್ಷಕ್ಕೆ ಸಿಲುಕುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಮತ್ತು ಜಿಲ್ಲಾ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ಹೆಚ್.ಎನ್. ಲಾವಣ್ಯ ತಿಳಿಸಿದ್ದಾರೆ.

ಅವರು ಶನಿವಾರ, ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಾದ ಮಕ್ಕಳ ಪ್ರಕರಣಗಳ ವೈಯಕ್ತಿಕ ಕಡತದ ದಾಖಲಾತಿ ನಿರ್ವಹಣೆ ಕುರಿತು ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿಗಳಿಗೆ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ದೇಶದ ಸಂಪತ್ತು, ಮಕ್ಕಳ ಬೆಳವಣಿಗೆಯ ಯಾವುದೇ ಹಂತದಲ್ಲಿ ಅವರನ್ನು ಪೋಷಕರು, ಕುಟುಂಬ, ಶಾಲೆ ಮತ್ತು ಸಮಾಜ ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ನಿರ್ಲಕ್ಷತೆಯಿಂದ ಕಂಡರೆ ಅಂತಹ ಮಕ್ಕಳು ಕಾನೂನು ಸಂಘರ್ಷಕ್ಕೆ ಸಿಲುಕಿ ಅಪರಾಧ ಪ್ರಕರಣಗಳಲ್ಲಿ ತೊಡಗುವ ಸಾಧ್ಯತೆ ಅಧಿಕವಾಗಿದೆ, ವಿವಿಧ ಕಾರಣಗಳಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗುವ ಮಕ್ಕಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ಮತ್ತು ಅವರ ಬಾಲ್ಯವನ್ನು ಅನುಭವಿಸಲು ಅಗತ್ಯ ವಾತಾವರಣ ನಿರ್ಮಾಣ ಮಾಡಬೇಕು.

ಇದರಿಂದ ಮಕ್ಕಳು ಸಮಾಜದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ, ಮಕ್ಕಳ ರಕ್ಷಣೆಗೆ ಹಲವು ಕಾನೂನುಗಳಿವೆ, ಈ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಿ, ಪಾಲಿಸಿ. ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗುವ ಮಕ್ಕಳನ್ನು ಪೋಷಕರ ರೀತಿ ನೋಡಿಕೊಳ್ಳಿ, ಅವರ ದಾಖಲಾತಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಸುರಕ್ಷಿತವಾಗಿ ದಾಖಲಿಡಿ, ಈ ದಾಖಲಾತಿಗಳು ಮಕ್ಕಳ ಮುಂದಿನ ಭವಿಷ್ಯದ ದೃಷ್ಠಿಯಿಂದ ಅತ್ಯಗತ್ಯ ಎಂದು ನ್ಯಾಯಾಧೀಶರು ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *