KARNATAKA
ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರ – ಸಿಎಂ.ಸಿದ್ದರಾಮಯ್ಯ

ಬೆಂಗಳೂರು, ಜೂನ್ 04: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ತಂಡಕ್ಕೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸಿದ್ದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿದ ದುರಂತದಲ್ಲಿ 11 ಜನರು ಸಾವಿಗೀಡಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾವೇರಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ವಿಧಾನ ಸೌಧದ ಬಳಿ ನಡೆದ ಆರ್ ಸಿ ಬಿ ತಂಡದ ಅಭಿನಂದನಾ ಕಾರ್ಯಕ್ರಮದಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಉಂಟಾಗಿದ್ದು, 11 ಜನ ಸಾವಿಗೀಡಾಗಿದ್ದಾರೆ. 33 ಜನ ಗಾಯಾಳುಗಳಾಗಿದ್ದಾರೆ. ಎಲ್ಲ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಗಾಯಗೊಂಡವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚಿಸಲಾಗಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅವರಿಗೆ ಸಾರಿಗೆ, ಊಟದ ವ್ಯವಸ್ಥೆಗಳನ್ನು ಸರ್ಕಾರ ಒದಗಿಸಲಿದೆ. ಇದು ಅನಿರೀಕ್ಷಿತ ದುರಂತ. ಯುವಕ ಯುವತಿಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಮೃತಪಟ್ಟವರ ಕುಟುಂಬಗಳಿಗೆ ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ
ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮ್ಯಾಜಿಸ್ಟ್ರೇಟ್ ತನಿಖೆಯನ್ನು ನಡೆಸಲು ಸೂಚನೆ ನೀಡಲಾಗಿದೆ. 15 ದಿನದಲ್ಲಿ ತನಿಖಾ ವರದಿ ನೀಡುವಂತೆ ಸೂಚಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಘಟನೆಯ ಬಗ್ಗೆ ರಾಜಕೀಯ ಮಾಡುವುದಿಲ್ಲ
ಇದು ಅನಿರೀಕ್ಷಿತ ಘಟನೆಯಾಗಿದ್ದು, ಕಾರ್ಯಕ್ರಮಕ್ಕೆ ಈ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯಿರಲಿಲ್ಲ .ಈ ಬಗ್ಗೆ ಸರ್ಕಾರದ ವಿರುದ್ದ ಕೇಳಿಬರುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಘಟನೆಯ ಬಗ್ಗೆ ರಾಜಕೀಯ ಮಾಡುವುದಿಲ್ಲ. ನಾನು ಈ ಘಟನಯನ್ನು ಸಮರ್ಥಿಸಿಕೊಳ್ಳುವುದಿಲ್ಲ.. ಇಂತಹ ಜನಸಾಗರವನ್ನು ಯಾರು ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣದಲ್ಲಿ 35 000 ಜನರ ಸಾಮರ್ಥ್ಯವಿದ್ದು, ಇಲ್ಲಿಗೆ 2 ರಿಂದ 3 ಲಕ್ಷ ಆಗಮಿಸಿದ್ದಾರೆ. ಭದ್ರತಾ ವೈಫಲ್ಯ ಸೇರಿದಂತೆ ದುರಂತಕ್ಕೆ ಕಾರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಸಾರ್ವಜನಿಕರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನನಗೆ ದೊರೆತ ಮಾಹಿತಿ ಪ್ರಕಾರ ಯಾವುದೇ ಘಟನೆಗಳು ವಿಧಾನಸೌಧದಲ್ಲಿ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಅಭಿನಂದನಾ ಸಮಾರಂಭ ಮಾಡಲು ಆತುರವೇನಿತ್ತು ಎಂದು ಟೀಕೆ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಮಾರಂಭವನ್ನು ಕ್ರಿಕೆಟ್ ಅಸೋಸಿಯೇಷನ್ ಅವರು ಆಯೋಜಿಸಲು ಬಯಸಿ ಅನುಮತಿ ಕೋರಿದ್ದರ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗಿತ್ತು. ಈ ದುರಂತ ಕ್ಕೆ ಸರ್ಕಾರ ದು:ಖ ವ್ಯಕ್ತಪಡಿಸುತ್ತದೆ. ಕ್ರಿಕೆಟ್ ಅಸೋಸಿಯೇಷನ್ ಅವರ ಈ ಕಾರ್ಯಕ್ರಮದಲ್ಲಿ ಪೊಲೀಸ್ ಭದ್ರತೆ ಒದಗಿಸುವುದಷ್ಟೇ ಸರ್ಕಾರದ ಕರ್ತವ್ಯ. ಆದ್ದರಿಂದ ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ