ಮಂಗಳೂರು, ಮೇ 6: ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ. ಕೇರಳದ ಕಡೂರುಗೊಡು ನಿವಾಸಿ ಮುಹಮ್ಮದ್ ನೌಫಲ್ (26) ಆತ್ಮಹತ್ಯೆ ಮಾಡಿಕೊಂಡ ವಿಚಾರಾಧೀನ ಕೈದಿ ಎಂದು ಪ್ರಕರಣ ದಾಖಲಿಸಿರುವ ಪಾಂಡೇಶ್ವರ ಪೊಲೀಸರು ತಿಳಿಸಿದ್ದಾರೆ.

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 2022ರ ಡಿ.22ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈತನನ್ನು 2024ರ ಎ.25ರಂದು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ವೆನ್ಲಾಕ್ ಆಸ್ಪತ್ರೆಯ ಜೈಲು ವಾರ್ಡ್ನಲ್ಲಿ ಇತರ ಕೈದಿಗಳೊಂದಿಗೆ ಇದ್ದ ಮುಹಮ್ಮದ್ ನೌಫಲ್ ಬೆಳಗ್ಗಿನ ಜಾವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.