Connect with us

    KARNATAKA

    7 ಅಧಿಕಾರಿಗಳಿಂದ ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರು: ಸಿಎಸ್‌ಗೆ ರಾಜಭವನ ಪತ್ರ

    ಬೆಂಗಳೂರು, ಆಗಸ್ಟ್ 08: ‘ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಲಂಚ ನೀಡುವಂತೆ ತಮ್ಮನ್ನು ಒತ್ತಾಯಿಸಿದರು’ ಎಂದು ಆರೋಪಿಸಿ ಕೃಷಿ ಇಲಾಖೆ ಅಧಿಕಾರಿಗಳು ಬರೆದಿದ್ದಾರೆನ್ನಲಾದ ಪತ್ರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ರಾಜಭವನ ಪತ್ರ ಬರೆದಿದೆ.

    ಕೃಷಿ ಇಲಾಖೆಯಲ್ಲಿ ಎಲ್ಲ ಹಂತದ ಅಧಿಕಾರಿಗಳ ಹುದ್ದೆಗೆ ತಕ್ಕಂತೆ ದರ ನಿಗದಿ ಮಾಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು. ಅದಾದ ಬಳಿಕ, ಯಾವ ಹುದ್ದೆಗೆ ಎಷ್ಟು ದರ ಎಂಬ ಪಟ್ಟಿಯೊಂದು ಬಿಡುಗಡೆಯಾಗಿತ್ತು. ಅದು ತಣ್ಣಗಾದ ಬೆನ್ನಲ್ಲೇ, ಮತ್ತೊಂದು ಪತ್ರ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ವರ್ಗಾವಣೆಯ ಗುಸುಗುಸು ಈಗ ರಾಜಭವನದ ಕದ ತಟ್ಟಿದೆ ಎನ್ನಲಾಗಿದ್ದು, ಖುದ್ದು ರಾಜಭವನವೇ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವುದು ಹೊಸ ಬೆಳವಣಿಗೆಯಾಗಿದೆ.

    ‘ಈ ಪತ್ರವೇ ನಕಲಿ ಹಾಗೂ ನನ್ನ ವಿರುದ್ಧ ನಡೆಸುತ್ತಿರುವ ಕುತಂತ್ರ’ ಎಂದು ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

    ರಾಜಭವನದ ಪತ್ರ: ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರ ಪರವಾಗಿ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಜಿ.ಪ್ರದೀಪ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾಶರ್ಮ ಅವರಿಗೆ ಬರೆದಿರುವ ಪತ್ರ ಸೋಮವಾರ ಬಹಿರಂಗಗೊಂಡಿದೆ.

    ‘ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಯು ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಯಿಂದ ₹6 ಲಕ್ಷದಿಂದ ₹8 ಲಕ್ಷದವರೆಗೆ ನೀಡುವಂತೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ.

    ಲಂಚ ಕೇಳುವ ಇಂತಹ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಲು ಕ್ರಮ ವಹಿಸದಿದ್ದರೆ ಅಧಿಕಾರಿಗಳು ಕುಟುಂಬದ ಸದಸ್ಯರ ಜತೆಗೆ ವಿಷ ಕುಡಿಯುವುದಾಗಿ ತಿಳಿಸಿದ್ದಾರೆ. ಈ ದೂರನ್ನು ನಿಯಮದ ಅನುಸಾರ ಪರಿಶೀಲಿಸಿ, ಸೂಕ್ತ ಕ್ರಮವಹಿಸಬೇಕು’ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೂಚಿಸಿದ್ದಾರೆ.

    ರಾಜಭವನದಿಂದ ಇದೇ 1ರಂದು ಮುಖ್ಯಕಾರ್ಯದರ್ಶಿಯವರಿಗೆ ಪತ್ರ ರವಾನೆಯಾಗಿದ್ದು, ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇದೇ 3ರಂದು ಪತ್ರವನ್ನು ಸ್ವೀಕರಿಸಿ, ಸಹಿ ಮಾಡಿದ್ದಾರೆ.

    ರಾಜಭವನಕ್ಕೆ ಕೃಷಿ ಅಧಿಕಾರಿಗಳು ಪತ್ರ ಬರೆದಿರುವ ವಿಚಾರ ಗೊತ್ತಾಗುತ್ತಿದ್ದಂತೆ ಸಚಿವ ಚಲುವರಾಯಸ್ವಾಮಿ ಅವರು ಪತ್ರ ಬರೆದ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ‘ತಾವು ಅಂತಹ ಪತ್ರ ಬರೆದಿಲ್ಲ’ ಎಂದು ಮುಚ್ಚಳಿಕೆ ಪತ್ರಗಳನ್ನು ಬರೆಸಿಕೊಂಡಿದ್ದಾರೆ ಎಂಬ ಸುದ್ದಿಯೂ ಹರಡಿದೆ.

    ವರ್ಗಾವಣೆ ದರ ಪಟ್ಟಿ ಆರೋಪ: ಕಳೆದ ವಿಧಾನಸಭಾ ಅಧಿವೇಶನದ ವೇಳೆ ಎಚ್‌.ಡಿ.ಕುಮಾರಸ್ವಾಮಿ ಅವರು, ಕೃಷಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಮತ್ತು ಪ್ರತಿಯೊಂದು ಹುದ್ದೆಗೂ ದರ ಪಟ್ಟಿ ನಿಗದಿ ಮಾಡಲಾಗಿದೆ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ದರ ಪಟ್ಟಿಯೂ ಸೋರಿಕೆ (ಎಕ್ಸೆಲ್‌ಶೀಟ್) ಆಗಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಇದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಧ್ಯೆ ಭಾರಿ ವಾಗ್ವಾದಕ್ಕೆ ಕಾರಣವಾಗಿತ್ತು.

    ಅಲ್ಲದೇ, ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಜಗದೀಶ್‌ ಆತ್ಮಹತ್ಯೆ ಪ್ರಯತ್ನದ ವಿಚಾರವಾಗಿ ಚಲುವರಾಯಸ್ವಾಮಿ ಮತ್ತು ಕುಮಾರಸ್ವಾಮಿ ಮಧ್ಯೆ ವಿಧಾನಸಭೆಯಲ್ಲಿ ಜಟಾಪಟಿ ನಡೆದಿತ್ತು. ಸಚಿವರ ಒತ್ತಾಸೆಯಿಂದಲೇ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ  ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.

    ತನಿಖೆಗೆ ಸಿಎಂಗೆ ಮನವಿ: ಚಲುವರಾಯಸ್ವಾಮಿ ‘ಕೆಲವರು ಹುಡುಕಿ ಹುಡುಕಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಹಿಂದೆ ಬಸ್‌ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣದಲ್ಲೂ ಇದೇ ರೀತಿ ಕುತಂತ್ರ ಮಾಡಿದ್ದರು. ಇದೊಂದು ನಕಲಿ ಪತ್ರವಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳೇ ಹೇಳಿದ್ದಾರೆ. ಆದರೂ ಪತ್ರದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.
    ಕೃಷಿ ಇಲಾಖೆ ಜಂಟಿ ನಿರ್ದೇಶಕ ಈಗಾಗಲೇ ಸಹಾಯಕ ನಿರ್ದೇಶಕರ ಜೊತೆ ಆನ್‌ಲೈನ್‌ ಸಭೆ ನಡೆಸಿದ್ದಾರೆ. ಯಾರೂ ಕೂಡ ಈ ರೀತಿ ಪತ್ರ ಬರೆದಿಲ್ಲ ಎಂದು ತಿಳಿಸಿರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ತನಿಖೆಯಿಂದ ಅದೊಂದು ನಕಲಿ ಪತ್ರ ಎಂದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೂ ಸೂಚಿಸಿದ್ದೇನೆ’ ಎಂದರು.
    Share Information
    Advertisement
    Click to comment

    You must be logged in to post a comment Login

    Leave a Reply