ಅಂಕೋಲಾ, ಮಾರ್ಚ್ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ್ ಅವರ ಮೇಲೆ ನಡೆದ ಈ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಗೋವಾ ಮೂಲದ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಗೋವಾ ಮೂಲದ ಜಾಕೀರ್ , ನೈಜಲ್ , ಸದ್ದಾಂ ಮತ್ತು ಇರ್ಫಾನ್ ಎಂದು ಗುರುತಿಸಲಾಗಿದೆ. ದಾಳಿಕೋರರು ಬಳಸಿದ್ದ ಎರಡು ಬೈಕ್ ಹಾಗೂ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ತಂಡವು ಕಳೆದ ಮೂರು ದಿನಗಳಿಂದ ಅಂಕೋಲಾದಲ್ಲಿ ಬೀಡುಬಿಟ್ಟು, ಹತ್ಯೆಗೆ ಪ್ಲಾನ್ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮಾರ್ಚ್ 25ರಂದು ಬೆಳಿಗ್ಗೆ ಗೋಪಾಲಕೃಷ್ಣ ನಾಯ್ಕ ಅವರು ಸಲೂನ್ಗೆ ಭೇಟಿ ನೀಡಿ ವಾಪಸಾಗುತ್ತಿದ್ದಾಗ, ಹೊಂಚು ಹಾಕಿದ್ದ ಆರೇಳು ಜನರ ತಂಡ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ಗೋಪಾಲಕೃಷ್ಣ ಅವರ ರಕ್ಷಣೆಗೆ ಸಹೋದರ ರಾಘವೇಂದ್ರ ಅವರು ಮುಂದಾದಾಗ, ಗೋಪಾಲ್ ಅವರು ಅಲ್ಲಿಂದ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ದಾಳಿಯಲ್ಲಿ ಗಾಯಗೊಂಡಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.
ಜನನಿಬಿಡ ಪ್ರದೇಶದಲ್ಲೇ ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಘಟನೆ ನಡೆದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು, ಕಾರವಾರದ ಮಾಜಾಳಿ ಚೆಕ್ ಪೋಸ್ಟ್ ಬಳಿ ಗೋವಾಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಈ ಬಗ್ಗೆ ಮಾಹಿತಿ ನೀಡಿ, “ಆರೋಪಿಗಳ ವಿಚಾರಣೆ ತೀವ್ರಗೊಂಡಿದೆ. ದಾಳಿಯ ಹಿಂದೆ ರಾಜಕೀಯ ಕಾರಣವಿದೆಯೇ ಅಥವಾ ರಿಯಲ್ ಎಸ್ಟೇಟ್ ವ್ಯವಹಾರದ ಹಗೆತನವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ,” ಎಂದಿದ್ದಾರೆ. ತಲೆಮರೆಸಿಕೊಂಡಿರುವ ಉಳಿದ ಪ್ರಮುಖ ಆರೋಪಿಗಳ ಪತ್ತೆಗಾಗಿ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಗೋವಾ ಸೇರಿದಂತೆ ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.