ಚಿಕ್ಕಮಗಳೂರು, ಮಾರ್ಚ್ 27: ಪ್ರವಾಸಿ ತಾಣವಾದ ಚಿಕ್ಕಮಗಳೂರು ನಗರದಲ್ಲಿ ದಾವೂದ್ ಇಬ್ರಾಹಿಂ ಹೆಸರಿರುವ ಖಾಸಗಿ ಬಸ್ಸೊಂದು ಪತ್ತೆಯಾಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿನಿಂದ ಪ್ರವಾಸಿಗರನ್ನು ಕರೆತಂದಿದ್ದ ಈ ಬಸ್ಸನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಮಿಳುನಾಡಿನ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳನ್ನು ಪ್ರವಾಸಕ್ಕಾಗಿ ಚಿಕ್ಕಮಗಳೂರಿಗೆ ಕರೆತಂದಿದ್ದ ಖಾಸಗಿ ಬಸ್ಸಿನ ಮೇಲೆ, “Underworld Dawood – The Real Don” ಎಂಬ ಬರಹವನ್ನು ಅಂಟಿಸಲಾಗಿತ್ತು. ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯ ಹೆಸರನ್ನು ಬಹಿರಂಗವಾಗಿ ವೈಭವೀಕರಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮತ್ತು ಭಜರಂಗದಳದ ಕಾರ್ಯಕರ್ತರು ನಗರದ ಮಧ್ಯಭಾಗದಲ್ಲಿ ಬಸ್ಸನ್ನು ತಡೆದು ನಿಲ್ಲಿಸಿದರು.
ಬಸ್ ಮೇಲೆ ಇಂತಹ ಪ್ರಚೋದನಾಕಾರಿ ಬರಹಗಳಿರುವುದನ್ನು ಕಂಡ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಬಸವನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ, ಪರಿಸ್ಥಿತಿಯನ್ನು ತಿಳಿಗೊಳಿಸಿ ಬಸ್ಸನ್ನು ಠಾಣೆಗೆ ಕೊಂಡೊಯ್ದಿದ್ದಾರೆ.