ಬೆಳ್ತಂಗಡಿ ಅಕ್ಟೋಬರ್ 30: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣೆಗೆಯೊಂದು ನಡೆದಿದ್ದು, ಇಡೀ ಪ್ರಕರಣದ ಮೂಲವಾಗಿರುವ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಸಂಖ್ಯೆ 39/2025 ಅನ್ನು ರದ್ದುಪಡಿಸಬೇಕು ಎಂದು ಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಹಾಗೂ ವಿಠಲಗೌಡ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಏಕಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬರಲಿದೆ.

ತನಿಖಾ ತಂಡವು ಈಗಾಗಲೇ ತಮ್ಮನ್ನು 100 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಸಂಗ್ರಹಿಸಲಾದ 164 ಹೇಳಿಕೆಗಳಲ್ಲಿ ತಮ್ಮ ವಿರುದ್ಧ ಯಾವುದೇ ಆರೋಪಗಳು ಕಂಡುಬಂದಿಲ್ಲ. ಆದರೂ, ಅಕ್ಟೋಬರ್ 24ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ನೀಡಲಾಗಿತ್ತು ಎಂದು ಅರ್ಜಿದಾರರು ದೂರಿದ್ದಾರೆ. ವಾಟ್ಸ್ಆ್ಯಪ್ ಮತ್ತು ಇ-ಮೇಲ್ ಮೂಲಕ ನೋಟಿಸ್ ಅನ್ನು ಕಳುಹಿಸಲಾಗಿದ್ದು, ಖುದ್ದಾಗಿ ಬಂದು ನೀಡಿಲ್ಲ. ಒಂದು ವೇಳೆ ವಿಚಾರಣೆಗೆ ಹಾಜರಾದರೆ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂಬ ಭೀತಿಯಿಂದ ಪ್ರಕರಣವನ್ನೇ ರದ್ದುಗೊಳಿಸುವಂತೆ ನ್ಯಾಯಾಲಯದ ಮೊರೆ ಹೋಗಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಧರ್ಮಸ್ಥಳ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಂತಿಮ ವರದಿ ನೀಡಲು ತಯಾರಿ ನಡೆಸುತ್ತಿದೆ. ಈ ನಡುವೆ ಈ ಪ್ರಕರಣ ಹೋರಾಟಗಾರರಿಗೆ ವಿಚಾರಣೆಗೆ ನೊಟೀಸ್ ನೀಡಿದ್ದು, ಅದರಲ್ಲಿ ಅರೆಸ್ಟ್ ಮಾಡುವಂತ ಸಾಧ್ಯತೆ ಇದೆ ಎಂದು ಹೇಳಲಾಗಿದೆ.