KARNATAKA
ಧರ್ಮಸ್ಥಳ ಪ್ರಕರಣ – ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ 18: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆಗೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ ಎಂದರು.

ಆರೋಪಗಳ ಕುರಿತ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ನೀಡಿರುವ ಹೇಳಿಕೆಗೆ ನಾವು ಪರವೂ ಇಲ್ಲ, ವಿರೋಧವೂ ಇಲ್ಲ. ಪೊಲೀಸ್ ಇಲಾಖೆಯವರು ಸಲ್ಲಿಸುವ ವರದಿಯ ಆಧಾರದ ಮೇಲೆ, ಎಸ್ಐಟಿ ಮಾಡಬೇಕೆಂಬ ಶಿಫಾರಸು ಬಂದರೆ ರಚಿಸುತ್ತೇವೆ. ಶನಿವಾರದೊಳಗೆ ಎಲ್ಲವೂ ಗೊತ್ತಾಗಲಿದೆ ಎಂದರು.
ದೂರುದಾರ 10 ವರ್ಷ ತಲೆಮರೆಸಿಕೊಂಡಿದ್ದ. ಆತ, ಪೊಲೀಸರ ಎದುರು ಹೇಳಿಕೆ ಕೊಟ್ಟಿದ್ದಾನೆ. ನಾನೇ ಹೂತು ಹಾಕಿದ್ದೇನೆ ಎಂದೆಲ್ಲಾ ಹೇಳಿದ್ದಾನೆ. ಆ ಜಾಗಕ್ಕೆ ಕರೆದುಕೊಂಡು ಹೋದರೆ ಹೆಣಗಳನ್ನು ತೋರಿಸುತ್ತೇನೆ ಎಂದೂ ಹೇಳಿದಾನೆ. ಪೊಲೀಸರು ಏನು ಹೇಳುತಾರೆಯೋ ನೋಡೋಣ ಎಂದು ಹೇಳಿದರು.