BELTHANGADI
ಧರ್ಮಸ್ಥಳ ಎಸ್ಐಟಿ ತನಿಖೆಯಿಂದ ಹಿಂದೆ ಸರಿದ ಐಪಿಎಸ್ ಅಧಿಕಾರಿ

ಬೆಂಗಳೂರು ಜುಲೈ 24: ಧರ್ಮಸ್ಥಳ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬನ ದಾಖಲಿರುವ ದೂರಿನ ತನಿಖೆಗೆ ಸರಕಾರ ರಚಿಸಿರುವ ಎಸ್ ಐಟಿಗೆ ಪ್ರಾರಂಭದ ಹಂತದಲ್ಲೇ ವಿಘ್ನ ಬಂದಿದ್ದು, ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಹಿಂದೆ ಸರಿಯಲು ಐಪಿಎಸ್ ಅಧಿಕಾರಿ ಸೌಮ್ಯಲತಾ ಹಾಗೂ ಮತ್ತೊಬ್ಬ ಐಪಿಎಸ್ಯೇತರ ಅಧಿಕಾರಿ ನಿರ್ಧರಿಸಿದ್ದಾರೆ.
ಅನಾಮಧೇಯ ವ್ಯಕ್ತಿಯೊಬ್ಬ ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನ್ನ ಹತ್ತಿರ ಮಾಹಿತಿ ಇದ್ದು, ಇದರ ಕುರಿತಂತೆ ತನಿಖೆ ನಡೆಸಬೇಕೆಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಈ ವಿಚಾರ ದೇಶದಾದ್ಯಂತ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಸರಕಾರ ಜುಲೈ 20ರಂದು ಎಸ್ಐಟಿ ರಚಿಸಿ, ತನಿಖೆಗೆ ಆದೇಶಿಸಿತ್ತು.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದರು. ಈ ತಂಡಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಇನ್ಸ್ಪೆಕ್ಟರ್ಗಳು, ಸಬ್ಇನ್ಸ್ಪೆಕ್ಟರ್ಗಳು, ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ಸ್ಟೆಬಲ್ಗಳನ್ನು ಒಳಗೊಂಡ 20 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರು ಜುಲೈ 22ರಂದು ಆದೇಶಿಸಿದ್ದರು.
ಸೌಮ್ಯಲತಾ ಅವರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಗೆ ಪತ್ರ ಬರೆದಿದ್ದು, ವೈಯಕ್ತಿಕ ಕಾರಣಕ್ಕೆ ವಿಶೇಷ ತನಿಖಾ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದೇನೆ. ಆದ್ದರಿಂದ, ತಮ್ಮನ್ನು ತಂಡದಿಂದ ಕೈಬಿಡಬೇಕೆಂದು ಮನವಿ ಮಾಡಿದ್ದರು’ ಎಂದು ಮೂಲಗಳು ತಿಳಿಸಿವೆ. ತನಿಖೆಯ ರೂಪರೇಷೆಗಳ ಕುರಿತು ಸಿಐಡಿ ಕಚೇರಿಯಲ್ಲಿ ನಡೆದಿದ್ದ ಎಸ್ಐಟಿ ಸಭೆಗೂ ಸೌಮ್ಯಲತಾ ಅವರು ಗೈರಾಗಿದ್ದರಿಂದ ಅವರ ಮನವಿಯನ್ನು ಪುರಸ್ಕರಿಸಿರುವ ಪ್ರಣವ್ ಮೊಹಾಂತಿ, ತಂಡದಿಂದ ಸೌಮ್ಯಲತಾ ಅವರ ಹೆಸರನ್ನು ಕೈಬಿಡುವಂತ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಗೊತ್ತಾಗಿದೆ. ಅಲ್ಲದೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಕೂಡ ಈ ತಂಡಹಿಂದೆ ಸರಿದಿದ್ದಾರೆ ಎಂದು ಹೇಳಲಾಗಿದೆ. ಆದರೆ ಅವರ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ.