LATEST NEWS
ಧರ್ಮಸ್ಥಳ ಪ್ರಕರಣ – ಎಸ್ಐಟಿ ತನಿಖೆ ಪ್ರಾರಂಭ – ಸರಣಿ ಸಭೆ

ಮಂಗಳೂರು ಜುಲೈ 26: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅಪರಿಚಿತ ಶವಗಳನನ್ನು ಅಂತ್ಯಕ್ರಿಯೆ ಮಾಡಿದ್ದೆ ಎಂದು ಅನಾಮಧೇಯ ವ್ಯಕ್ತಿಯ ದೂರಿನ ಹಿನ್ನಲೆ ರಚಿಸಲಾಗಿದ್ದ ಎಸ್ಐಟಿ ತನ್ನ ತನಿಖೆ ಪ್ರಾರಂಭಿಸಿದೆ.
ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ. ಅನುಚೇತ್ ಮತ್ತು ದಯಾಮ ಮಾತ್ರ ದಕ್ಷಿಣ ಕನ್ನಡಕ್ಕೆ ಶುಕ್ರವಾರ ಬಂದಿದ್ದು ಮಂಗಳೂರಿನಲ್ಲಿ ಎರಡು ಸಭೆಗಳನ್ನು ನಡೆಸಿದರು.
ಸ್ಥಳೀಯ ಶಾಣೆಯಲ್ಲಿ ಅಪರಿಚಿತ ವ್ಯಕ್ತಿಯ ದೂರಿನ ಮೇರೆಗೆ ದಾಖಲಾದ ಪ್ರಕರಣಗಳ ಕುಂತ ದಾಖಲೆಗಳನ್ನು ಎಸ್ಐಟಿ ತಂಡ ಸ್ವೀಕರಿಸಿದೆ. ಅಲ್ಲದೆ, ಪ್ರಕರಣದ ಈವರೆ ಗಿನ ತನಿಖೆ ಬಗ್ಗೆ ಸ್ಥಳೀಯ ಪೊಲೀಸರಿಂದ ಮಂಗಳೂರಿ ನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಡಿಐಜಿ ಅನುಚೇತ್ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲೇ ಎಸ್ಐಟಿ ತಾತ್ಕಾಲಿಕ ಕ್ಯಾಂಪ್ ಕಚೇರಿ ಆರಂಭಿಸಲಿದ್ದಾರೆ ಎಂದು ಮೂಲಗಳು ಹೇಳಿದೆ. ಎಸ್ಐಟಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಡಿಜಿಪಿ ಡಾ.ಎಂ.ಸಲೀಂ ಆದೇಶಿಸಿದ್ದಾರೆ. ಅಲ್ಲದೆ, ಎಸ್ಐಟಿ ರಚನೆ ಆದೇಶದಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ನೆರವು ಪಡೆಯುವಂತೆ ಸರ್ಕಾರ ಸೂಚಿಸಿತ್ತು. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಹಲವರ ಅಂತ್ಯಕ್ರಿಯೆ ನಡೆಸಿದ್ದಾಗಿ ನ್ಯಾಯಾಧೀಶರ ಮುಂದೆ ವ್ಯಕ್ತಿಯೊಬ್ಬರು ನೀಡಿದ್ದ ಹೇಳಿಕೆ ಆಧರಿಸಿ ತನಿಖೆಗೂ ಸಾಮಾಜಿಕ ಹೋರಾಟಗಾರರು ಹಾಗೂ ವಕೀಲರು ಒತ್ತಾಯಿಸಿದ್ದರು.
ಈ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಡಿಜಿಪಿಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖೆಗಾಗಿ ಎಸ್ಐಟಿ ರಚಿಸಿತ್ತು, ಆದರೆ ಎಸ್ ಐಟಿಯಿಂದ ಇಬ್ಬರು ಐಪಿಎಸ್ ಅಧಿಕಾರಿಗಳು ಹಾಗೂ ನಾನ್ ಐಪಿಎಸ್ ಅಧಿಕಾರಿಯೊಬ್ಬರು ಹೊರಗುಳಿಯುವ ಇಂಗಿತ ವ್ಯಕ್ತಪಡಿಸಿದ್ದರು. ಕೊನೆಗೆ ಅಧಿಕಾರಿಗಳನ್ನು ಸಮಾಧಾನಪಡಿಸಿದ ಸರ್ಕಾರ, ತನಿಖೆಯಲ್ಲಿ ಪಾಲ್ಗೊಳು ವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಧರ್ಮಸ್ಥಳಕ್ಕೆ ತೆರಳ ಎಸ್ಐಟಿ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ.
ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮರನ್ನು ಮುಖ್ಯ ತನಿಖಾಧಿಕಾರಿಯಾಗಿ (ಐಒ) ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇಮಿಸಿ ದ್ದಾರೆ ಎಂದು ತಿಳಿದು ಬಂದಿದೆ.
ಅಪರಿಚಿತ ಮೃತದೇಹಗಳ ಹೂತಿದ್ದ ಎನ್ನಲಾದ ವ್ಯಕ್ತಿಯನ್ನು ಎಸ್ ಐಟಿ ತಂಡ ಸದ್ಯದಲ್ಲೇ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪದಲ್ಲಿರುವ ಪೊಲೀಸ್ ಇಲಾಖೆಯ ವಸತಿ ಸಮುಚ್ಚಯದ ಹೊಸ ಕಟ್ಟಡದ ನೆಲಮಹಡಿಯ ಎರಡು ಕೊಠಡಿಗಳಲ್ಲಿ ತನಿಖಾ ತಂಡದ ಕಚೇರಿ ತೆರೆಯಲು ಸಿದ್ಧತೆ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಅವರ ಸೂಚನೆಯಂತೆ ಇಲ್ಲಿ ಕಚೇರಿಗೆ ಬೇಕಾದ ಸಿದ್ಧತೆಗಳನ್ನು ಬೆಳ್ತಂಗಡಿ ಪೊಲೀಸರು ಮಾಡಿದ್ದಾರೆ. ತನಿಖಾ ತಂಡದ ಕಚೇರಿ ಮಂಗಳೂರಿನ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಬೆಳ್ತಂಗಡಿ ಅಥವಾ ಧರ್ಮಸ್ಥಳ ಗ್ರಾಮದಲ್ಲಿ ತೆರೆಯುವ ಸಾಧ್ಯತೆ ಇದೆ ಎನ್ನಲಾಗಿತ್ತು. ತನಿಖಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯಲು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯುವುದೇ ಸೂಕ್ತ ಎಂದು ಅಂತಿಮವಾಗಿ ನಿರ್ಧರಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.