Connect with us

    KARNATAKA

    ಶಾಲಾ ಶಿಕ್ಷಕರಿಗೂ ವಸ್ತ್ರಸಂಹಿತೆ: ಚರ್ಚೆ ಬಳಿಕ ನಿರ್ಧಾರ- ಸಚಿವ ಮಧು ಬಂಗಾರಪ್ಪ

    ಬೆಂಗಳೂರು, ಜುಲೈ 11: ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಗುವುದು. ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

    ವಿಧಾನ ಪರಿಷತ್‌ನಲ್ಲಿ ಸೋಮವಾರ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ವಸ್ತ್ರಸಂಹಿತೆಗೆ ನಿಯಮಗಳಿಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜತೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.

    ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಬದ್ಧವಾಗಿದೆ. ಕೋರ್ಟ್‌ ತಡೆ ಇರುವ ಕಾರಣ 13,500 ಸಾವಿರ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಲು ಸಾಧ್ಯವಾಗಿಲ್ಲ. ಕಾನೂನು ತಜ್ಞರ ಜತೆ ಚರ್ಚಿಸಲಾಗಿದೆ. ಶೀಘ್ರ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. 900ಕ್ಕೂ ಹೆಚ್ಚು ವಿಶೇಷ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ 306 ಸರ್ಕಾರಿ ಪ್ರೌಢಶಾಲೆಗಳನ್ನು ಮೇಲ್ದರ್ಜೆಗೇರಿಸಿ, ಪದವಿಪೂರ್ವ ಶಿಕ್ಷಣಕ್ಕೆ ಅವಕಾಶ ನೀಡಲಾಗುವುದು. ಈಗಾಗಲೇ 113 ಪ್ರಾಥಮಿಕ ಶಾಲೆಗಳಲ್ಲಿ ಪ್ರೌಢಶಿಕ್ಷಣಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

    ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 3,794 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಪ್ರಸ್ತುತ 4,783 ಹುದ್ದೆಗಳು ಖಾಲಿ ಇವೆ. ಆರ್ಥಿಕ ಇಲಾಖೆ  2015ಕ್ಕಿಂತ ಹಿಂದಿನ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. ಪ್ರೌಢಶಾಲೆಗಳಿಗೆ ಮಾತ್ರ ಬೋಧಕೇತರ ಸಿಬ್ಬಂದಿ ಇದ್ದು, ಪ್ರಾಥಮಿಕ ಶಾಲೆಗಳಿಗೆ ಅಂತಹ ಸೌಲಭ್ಯ ಇಲ್ಲ ಎಂದು ಪ್ರತಿಕ್ರಿಯಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply