BANTWAL
ಶಿಕ್ಷಣ ಪ್ರೇಮಿ, ಹಿರಿಯ ಧುರೀಣ ಬಿ.ಅಹ್ಮದ್ ಹಾಜಿ ತುಂಬೆ ನಿಧನ
ಬಂಟ್ವಾಳ ಅಗಸ್ಟ್ 16: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಹ್ಮದ್ ಹಾಜಿ ಅವರು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಟಿಂಬರ್ ಉದ್ಯಮದಲ್ಲಿ ಖ್ಯಾತಿಯನ್ನು ಪಡೆದಿರುವ ಅಹ್ಮದ್ ಹಾಜಿ ಅವರು ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧಕರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಸಂಘ ಸಂಸ್ಥೆಗಳು, ಮಸೀದಿಗಳ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಯಶಸ್ವಿ ಉದ್ಯಮಿಯಾಗಿ, ಶಿಕ್ಷಣ ಪ್ರೇಮಿಯಾಗಿ, ತಾನು ಗಳಿಸಿದ ಸಂಪತ್ತಿನ ಒಂದು ಅಂಶವನ್ನು ಸಮಾಜದ ಉನ್ನತಿಗಾಗಿ ಧಾರೆಯೆರೆದ ಅಹ್ಮದ್ ಹಾಜಿ, ಜಿಲ್ಲೆಯ ಹಲವಾರು ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಸಂಸ್ಥೆಗಳ ಸಂಸ್ಥಾಪಕರಾಗಿ, ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.
You must be logged in to post a comment Login