DAKSHINA KANNADA
ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ರೋಗಿಗಳು ಅಪಾಯದಿಂದ ಪಾರು

ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನಕ್ಕೆ ಪುತ್ತೂರು ಭಜರಂಗದಳ ಕಾರ್ಯಕರ್ತರು ಬಂದು ಬೆಂಕಿ ಶಮನಕ್ಕೆ ಸಹಕರಿಸಿದ್ದಾರೆ.

ವಿಷಯ ತಿಳಿದು ರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿದ್ದಾರೆ. ಆಸ್ಪತ್ರೆಯ ಐ ಸಿ ಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.