ಮಂಡ್ಯ,ಏಪ್ರಿಲ್ 01: ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಆಗಮಿಸಿದ್ದ ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಮನಕಲಕುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಬಲಮುರಿಯಲ್ಲಿ ನಡೆದಿದೆ.

ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ವಿಘ್ನೇಶ್ (27) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಖ್ಯಾತ ಐಟಿ ಸಂಸ್ಥೆ ಇನ್ಫೋಸಿಸ್ನಲ್ಲಿ ಉದ್ಯೋಗಿಯಾಗಿದ್ದರು. ಬುಧವಾರ ತಮ್ಮ ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕಾಗಿ ಮಂಡ್ಯ ಜಿಲ್ಲೆಗೆ ಆಗಮಿಸಿದ್ದರು.
ಶ್ರೀರಂಗಪಟ್ಟಣ ಸಮೀಪದ ಎಡಮುರಿ ಪ್ರದೇಶದಲ್ಲಿ ಕಾವೇರಿ ನದಿಗೆ ಇಳಿದು ಈಜಾಡುತ್ತಿದ್ದಾಗ, ನೀರಿನ ಆಳದ ಅರಿವಿಲ್ಲದೆ ವಿಘ್ನೇಶ್ ಸುಳಿಗೆ ಸಿಲುಕಿದ್ದಾರೆ. ತಾನು ಮುಳುಗುತ್ತಿರುವುದನ್ನು ಗಮನಿಸಿ ರಕ್ಷಣೆಗಾಗಿ ಸ್ನೇಹಿತರನ್ನು ಕೂಗಿ ಕರೆದಿದ್ದಾರೆ. ಆದರೆ, ನೀರಿನ ಸೆಳೆತ ಹೆಚ್ಚಿದ್ದರಿಂದ ಸ್ನೇಹಿತರಿಗೆ ಅವರನ್ನು ರಕ್ಷಿಸಲು ಸಾಧ್ಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಿಘ್ನೇಶ್ ಅವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಈ ಸಂಬಂಧ ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.