LATEST NEWS
ಕೊರಗ ಸಮುದಾಯದ ಮೇಲೆ ಪೊಲೀಸರ ದೂರು – ಸಚಿವ ಕೋಟ ವಿರುದ್ದ ಗರಂ ಆದ ಸಿದ್ದರಾಮಯ್ಯ

ಬೆಂಗಳೂರು ಡಿಸೆಂಬರ್ 31: ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಕೋಟತಟ್ಟು ಗ್ರಾಮದಲ್ಲಿ ನಡೆದ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರು ಮದುಮಗ ಸೇರಿದಂತೆ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸುದ್ದಿಯಾಗುತ್ತಿದ್ದಂತೆ ಕೋಟ ಠಾಣೆಯ ಎಸ್ ಐ ನ್ನು ಅಮಾನತು ಮಾಡಲಾಗಿದ್ದು, ಉಳಿದ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿತ್ತು.
ಆದರೆ ಮತ್ತೆ ಪೊಲೀಸರು 7 ಜನ ಕೊರಗ ಸಮುದಾಯದವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ಇದು ಮತ್ತೆ ವಿವಾದಕ್ಕೆ ಕಾರಣವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ?. ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ ಎಂದ ಅವರು ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ.
ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ ಬಿಜೆಪಿ ಸರ್ಕಾರ, ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದವೂ ಗರಂ
ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ?