ಮಂಗಳೂರು ಜನವರಿ 01: ಇತ್ತೀಚೆಗೆ ಮಳಲಿ ನಾರ್ಲಪದವು ಎಂಬಲ್ಲಿ ದನದ ಮಾಂಸ ಅಕ್ರಮ ಸಾಗಾಟ ಪ್ರಕರಣದಲ್ಲಿ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಅಬ್ದುಲ್ ಸತ್ತಾರ್ ನ್ಯಾಯಾಲಕಯಕ್ಕೆ ತಿರುಚಿದ ಬಿಲ್ ನೀಡಿ ನ್ಯಾಯಾಲಯವನ್ನು ವಂಚಿಸಿದ ಘಟನೆ ನಡೆದಿದ್ದು, ಇದೀಗ ಆರೋಪಿಯ ಜೊತೆ ನಕಲಿ ಬಿಲ್ ನೀಡಿದವನ್ನು ಅರೆಸ್ಟ್ ಮಾಡಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.


ದನದ ಮಾಂಸವನ್ನು ಅಕ್ರಮವಾಗಿ ಸಾಗಿಸಿದ ಆರೋಪಿ ಮುಲ್ಲರಪಟ್ಣದ ಅಬ್ದುಲ್ ಸತ್ತಾರ್ ಅಲಿಯಾಸ್ ಸತ್ತಾರ್ (54), ತಿರುಚಿದ ಬಿಲ್ ನೀಡಿದ್ದ ದೇರಳೆಕಟ್ಟೆ ಮಾಂಸದ ಅಂಗಡಿ ಮಾಲೀಕ, ತೊಕ್ಕೊಟ್ಟು ಚೊಂಬುಗುಡ್ಡೆಯ ಅಬ್ದುಲ್ ಸತ್ತಾರ್ (41) ಬಂಧಿತರು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಅಬ್ದುಲ್ ಸತ್ತಾರ್ ತಮ್ಮ ಅಪ್ರಾಪ್ತ ವಯಸ್ಸಿನ ಮಗಳ ಜೊತೆ ಬೈಕಿನಲ್ಲಿ ಡಿಸೆಂಬರ್ 27ರಂದು ಸಾಗುತ್ತಿದ್ದಾಗ ಆರೋಪಿಗಳಾದ ಸುಮಿತ್ ಭಂಡಾರಿ ಹಾಗೂ ರಜತ್ ನಾಯ್ಕ್‌ ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿ, ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಬಜಪೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅಬ್ದುಲ್ ಸತ್ತಾರ್ ಬೈಕಿನಲ್ಲಿ ಸುಮಾರು 19 ಕೆ.ಜಿ. ಗೋಮಾಂಸ ಪತ್ತೆಯಾಗಿತ್ತು. ಗೋಮಾಂಸ ಸಾಗಾಟಕ್ಕೆ ಅಧಿಕೃತ ದಾಖಲೆ ಹೊಂದಿರದ ಕಾರಣ ಸ್ವಯಂಪ್ರೇರಿತವಾಗಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಅಬ್ದುಲ್ ಸತ್ತಾರ್‌ನನ್ನೂ ಬಂಧಿಸಿದ್ದರು.

ಗೋಮಾಂಸ ಖರೀದಿಸಿದ್ದಕ್ಕೆ ದೇರಳಕಟ್ಟೆಯ ಮಾಂಸ ಮಾರಾಟ ಮಳಿಗೆಯ ಬಿಲ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅದರ ಆಧಾರದಲ್ಲಿ ಅಬ್ದುಲ್ ಸತ್ತಾರ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಅಬ್ದುಲ್ ಸತ್ತಾರ್ ಸಲ್ಲಿಸಿದ ಬಿಲ್ ಬಗ್ಗೆ ಅನುಮಾನ ಬಂದಿದ್ದರಿಂದ ಪೊಲೀಸರು ದೇರಳಕಟ್ಟೆಯ ಮಾಂಸ ಮಾರಾಟ ಮಳಿಗೆಯ ಬಿಲ್ ಬುಕ್ ಪರಿಶೀಲಿಸಿದ್ದರು. ಆಗ ನ್ಯಾಯಾಲಯಕ್ಕೆ ತಿರುಚಿದ ಬಿಲ್ ಸಲ್ಲಿಸಿರುವುದು ಪತ್ತೆಯಾಗಿತ್ತು’ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

Share Information