KARNATAKA
ನಿಶ್ಚಿತಾರ್ಥ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರಿಗೆ ಲಾರಿ ಡಿಕ್ಕಿ, ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿ ಸೇರಿ ಐವರ ಬಲಿ

ಹುಬ್ಬಳ್ಳಿ ಮೇ 06: ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮೂರಕೈ ಗ್ರಾಮ ಮೂಲದ ವಿಠಲ್ ಶೆಟ್ಟಿ (55) ಶಶಿಕಲಾ ಶೆಟ್ಟಿ (44), ಸಂದೀಪ್ ಶೆಟ್ಟಿ (26), ಶ್ವೇತಾ ಶೆಟ್ಟಿ (29) ಹಾಗೂ ಅಂಜಲಿ ಶೆಟ್ಟಿ (26) ಎಂದು ಗುರುತಿಸಲಾಗಿದೆ. ವಿಠಲ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಕಳೆದ ಹಲವು ವರ್ಷಗಳಿಂದ ಬಾಗಲಕೋಟೆಯ ಕುಳಗೇರಿ ಕ್ರಾಸ್ ಬಳಿ ಹೋಟೆಲ್ ನಡೆಸಿಕೊಂಡಿದ್ದರು. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಠಲ್ ಅವರು ಸೋಮವಾರ ತಮ್ಮ ಮಗಳು ಶ್ವೇತಾ ಶೆಟ್ಟಿ ಅವರ ವಿವಾಹ ನಿಶ್ಚಿತಾರ್ಥ ಹಾಗೂ ಗೃಹಪ್ರವೇಶ ಕಾರ್ಯಕ್ರಮವನ್ನು ಸಾಗರದಲ್ಲಿ ಇಟ್ಟುಕೊಂಡಿದ್ದರು. ಈ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಕುಳಗೇರಿಯತ್ತ ಹೊರಟಿದ್ದರು. ಆದರೆ, ಹುಬ್ಬಳ್ಳಿಯ ಹೊರವಲಯದಲ್ಲಿ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಅಂಜಲಿ ಎಂಬ ಯುವತಿ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದರು ಎಂದು ತಿಳಿದುಬಂದಿದೆ.