Connect with us

    LATEST NEWS

    ಜೂನ್ 14 ರಿಂದ ಕಟೀಲಿನಲ್ಲಿ ಭಕ್ತರಿಗೆ ದೇವರ ದರ್ಶನ ಭಾಗ್ಯ

    ದೇಗುಲ ಪ್ರವೇಶಕ್ಕೆ ಇ ಟಿಕೆಟ್ : ರಾಜ್ಯದಲ್ಲೇ ಮೊದಲ ಪ್ರಯೋಗ

    ಮಂಗಳೂರು ಜೂನ್ 10: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜೂನ್ 14ರ ಭಾನುವಾರದಿಂದ ಭಕ್ತರಿಗೆ ದೇವರ ದರ್ಶನ ಅವಕಾಶ ನೀಡಲಾಗುತ್ತಿದೆ. ಆದರೆ ಭಕ್ತರು ದೇವಸ್ಥಾನದ ವೆಬ್‌ಸೈಟ್‌ನಿಂದ ಉಚಿತವಾಗಿ ಈ ಟಿಕೆಟ್ ಮೂಲಕ ತಮ್ಮ ಅವಕಾಶವನ್ನು ಕಾದಿರಿಸಬೇಕಾಗುತ್ತದೆ. ಬಹುಶಃ ದೇವಸ್ಥಾನವೊಂದು ದೇವರ ದರ್ಶನಕ್ಕೆ ಇ ಟಿಕೆಟ್ ಮೂಲಕ ಕಾದಿರಿಸುವ ವ್ಯವಸ್ಥೆ ಮಾಡಿರುವುದು ರಾಜ್ಯದಲ್ಲೇ ಮೊದಲ ಪ್ರಯೋಗವಾಗಿದೆ.

    ದೇವರ ದರ್ಶನಕ್ಕೆ ಸರಕಾರ ಕೆಲವೊಂದು ನಿಯಮಗಳನ್ನು ರೂಪಿಸಿರುವುದರಿಂದ ಇದನ್ನು ಪಾಲಿಸಲು ಕಟೀಲು ದೇವಸ್ಥಾನದಲ್ಲಿ ಕೊಂಚ ಕಷ್ಟವಾಗಿತ್ತು. ಭೇಟಿಯ ಸಂದರ್ಭ ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಮಾಡಬೇಕಾಗಿರುವುದರಿಂದ ಭಕ್ತರ ಸರತಿ ಸಾಲಿನ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇತ್ಯಾದಿ ಸಮಸ್ಯೆಗಳಿಗೆ ಸಿದ್ಧತೆಯ ಅಗತ್ಯ ಇತ್ತು. ಹಾಗಾಗಿ ಕಳೆದ ಜೂನ್ 8 ರಂದು ಕಟೀಲು ದೇಗುಲ ಭಕ್ತರ ದರ್ಶನಕ್ಕೆ ತೆರೆದಿರಲಿಲ್ಲ.

    ಇದೀಗ ಜೂನ್ 14 ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಲು ದೇಗುಲದ ವಠಾರದಲ್ಲಿ ಅಲ್ಲಲ್ಲಿ ಬಿಳಿ ಬಣ್ಣದ ಬಾಕ್ಸ್ ಹಾಕಲಾಗಿದೆ. ಇ ಪಾಸ್ ವ್ಯವಸ್ಥೆಗೂ ಸಿದ್ಧತೆ ಮಾಡಲಾಗಿದ್ದು, ಪ್ರಾಯೋಗಿಕವಾಗಿಯೂ ನೋಡಲಾಗಿದೆ. ಭಕ್ತರು ವೆಬ್ ಸೈಟ್ ಮೂಲಕ ನೋಂದಾಯಿಸಿ ದೇಗುಲಕ್ಕೆ ಬರಬಹುದಾಗಿದೆ. ಪ್ರತಿ ಹದಿನೈದು ನಿಮಿಷಕ್ಕೆ ಅರವತ್ತು ಮಂದಿಯಷ್ಟು ಭೇಟಿ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 7.30ರಿಂದ ಸಂಜೆ 7.30 ರತನಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

    ಇನ್ನು ಸ್ಥಳೀಯ ಭಕ್ತರಿಗೆ ಈಪಾಸ್ ಇಲ್ಲದೆ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ ಗಂಟೆ 6 ರಿಂದ 7.30 ರವರೆಗಿನ ಸಮಯ ನಿಗದಿಪಡಿಸಲಾಗಿದ್ದು, ಥರ್ಮಲ್ ಸ್ಕ್ರೀನಿಂಗ್ ಮಾಡಿ ಭಕ್ತರನ್ನು ಒಳಬಿಡಲಾಗುತ್ತದೆ. ಆದರೆ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ ಎಂದು ದೇಗುಲದ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply