ಬೆಂಗಳೂರು, ಮಾರ್ಚ್ 21: ರಾಜಧಾನಿ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಯುಗಾದಿ ಹಬ್ಬದ ದಿನವೇ ನಡೆದ ಘಟನೆಯೊಂದು ಆತಂಕ ಮೂಡಿಸಿದೆ. ಬೇಗೂರು ಸಮೀಪದ ಆರ್ಸಿ ಲೇಔಟ್ನ ವಿಶ್ವಪ್ರಿಯ ಅಪಾರ್ಟ್ಮೆಂಟ್ನಲ್ಲಿ ಇಬ್ಬರು ಅಪರಿಚಿತರು ಗೃಹಬಳಕೆಯ ಎರಡು ಗ್ಯಾಸು ಸಿಲಿಂಡರ್ಗಳನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಗುರುವಾರ ಮಧ್ಯಾಹ್ನ ವೇಳೆಯಲ್ಲಿ ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದ ಇಬ್ಬರು ಯುವಕರು ಅಪಾರ್ಟ್ಮೆಂಟ್ಗೆ ಪ್ರವೇಶಿಸಿದ್ದಾರೆ. ಇವರಲ್ಲಿ ಒಬ್ಬ ಹೊರಗಡೆ ನಿಂತು ನಿಗಾ ವಹಿಸಿದ್ದರೆ, ಮತ್ತೊಬ್ಬ ಒಳಗೆ ನುಗ್ಗಿ ಎರಡು ಸಿಲಿಂಡರ್ಗಳನ್ನು ತೆಗೆದುಕೊಂಡು ಬಂದಿದ್ದಾನೆ. ಬಳಿಕ ಇಬ್ಬರೂ ಯಾವುದೇ ಅನುಮಾನ ಮೂಡಿಸದೇ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಅಪಾರ್ಟ್ಮೆಂಟ್ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಆರೋಪಿಗಳ ಚಲನವಲನ ದಾಖಲಾಗಿದೆ. ಈ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಮನೆ ಮಾಲೀಕರು ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಸಿಲಿಂಡರ್ ಕೊರತೆ ಹಿನ್ನೆಲೆ ಇಂತಹ ಕಳವು ಪ್ರಕರಣಗಳು ಹೆಚ್ಚುತ್ತಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.