ಮಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಶುಕ್ರವಾರ ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದ್ದರೂ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಮತಗಟ್ಟೆ ಸಮೀಪ ಗೂಂಡಾಗಿರಿ ನಡೆಸಿದ್ದಾನೆ.

ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಜೊತೆ ಜನ ಸೇರಿರೋದನ್ನು ಬಿಜೆಪಿ ಕಾರ್ಯಕರ್ತ ಪ್ರಶ್ನಿಸಿದ್ದಾನೆ. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಬಿಜೆಪಿ ಕಾರ್ಯಕರ್ತರ ಸಂದೀಪ್ ಎಕ್ಕೂರು ಹಾಗೂ ಕಾರ್ಯಕರ್ತರಿಂದ ಮಾತಿನ ಚಕಮಕಿ ನಡೆದಿದೆ. ಅಲ್ಲದೇ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆದಿದ್ದು, ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದಿದ್ದಾರೆ.

ಇತ್ತ ಇದನ್ನು ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.