ನವದೆಹಲಿ/ನಾಸಿಕ್: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯ ನಾಸಿಕ್ ಶಾಖೆಯಲ್ಲಿ ಕೇಳಿಬಂದಿರುವ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳು ಅತ್ಯಂತ ಗಂಭೀರವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಿಸಿಎಸ್ ಕಚೇರಿಯ ಎಂಟು ಮಹಿಳಾ ಉದ್ಯೋಗಿಗಳು ತಮ್ಮ ಸಹೋದ್ಯೋಗಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಿರುವ ಗಂಭೀರ ಆರೋಪಗಳನ್ನು ಮಾಡಿದ್ದರು. ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ, ಈ ಬೃಹತ್ ಜಾಲ ಬೆಳಕಿಗೆ ಬಂದಿದೆ.
ಈ ಘಟನೆಯು ಕಳವಳಕಾರಿ ಮತ್ತು ಅತೀವ ದುಃಖಕರವಾಗಿದೆ. ಟಾಟಾ ಸಮೂಹವು ತನ್ನ ಉದ್ಯೋಗಿಗಳಿಂದ ಇಂತಹ ದಬ್ಬಾಳಿಕೆ ಅಥವಾ ದುಷ್ಕೃತ್ಯಗಳನ್ನು ಎಂದಿಗೂ ಸಹಿಸುವುದಿಲ್ಲ,” ಎಂದು ಚಂದ್ರಶೇಖರನ್ ಹೇಳಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆರತಿ ಸುಬ್ರಮಣಿಯನ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲು ನಿರ್ಧರಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಎಫ್ಐಆರ್ಗಳನ್ನು ದಾಖಲಿಸಿಕೊಂಡಿದ್ದು, ಏಳು ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್, ತೌಸಿಫ್ ಅತ್ತಾರ್, ಡ್ಯಾನಿಶ್ ಶೇಖ್ ಮತ್ತು ಒಬ್ಬ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಮಹಾರಾಷ್ಟ್ರ ಪೊಲೀಸರು ವಿಶೇಷ ತನಿಖಾ ತಂಡ (SIT) ರಚಿಸಿದ್ದಾರೆ.
“ಆರೋಪಿಗಳ ವಿರುದ್ಧ ಈಗಾಗಲೇ ಪ್ರಾಥಮಿಕ ಕ್ರಮ ಕೈಗೊಳ್ಳಲಾಗಿದೆ. ನಡೆಯುತ್ತಿರುವ ತನಿಖೆಗೆ ಕಂಪನಿಯು ಸಂಪೂರ್ಣ ಸಹಕಾರ ನೀಡುತ್ತಿದೆ. ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಚಂದ್ರಶೇಖರನ್ ಭರವಸೆ ನೀಡಿದ್ದಾರೆ.