ಬೆಳ್ತಂಗಡಿ ಜೂನ್ 17: ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ಸಮೀಪದ ಮದ್ದಡ್ಕ ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರು ಹಾಗೂ ಬೈಕ್ಗಳ ನಡುವೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಢಿಕ್ಕಿಯ ರಭಸಕ್ಕೆ ಒಂದು ಕಾರು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಹೆದ್ದಾರಿ ಸಂಚಾರ ಕೆಲಕಾಲ ವ್ಯತ್ಯಯಗೊಂಡಿತ್ತು.

ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರೊಂದು ಮದ್ದಡ್ಕ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಅತಿ ವೇಗದಲ್ಲಿದ್ದ ಈ ಕಾರು ಹೆದ್ದಾರಿಯ ಎದುರು ದಿಕ್ಕಿನಿಂದ ಅಂದರೆ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಮತ್ತೊಂದು ಕಾರು ಹಾಗೂ ಬೈಕಿಗೆ ಭೀಕರವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗಾಯಾಳು ಸವಾರನನ್ನು ರಕ್ಷಿಸಿ, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿ ಮೊದಲು ಢಿಕ್ಕಿ ಹೊಡೆದ ಕಾರು ಹೆದ್ದಾರಿಯ ಮಧ್ಯದಲ್ಲೇ ತಲೆಕೆಳಗಾಗಿ ಪಲ್ಟಿಯಾಗಿದೆ. ಇನ್ನು ಮುಖಾಮುಖಿ ಢಿಕ್ಕಿಯಾದ ಮತ್ತೊಂದು ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.