ಹಾಸನ,ಏಪ್ರಿಲ್ 01: ಮದುವೆ ಮಾಡಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಗನೊಬ್ಬ ತನ್ನ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ವರದಿಯಾಗಿದೆ.

ತಾಲ್ಲೂಕಿನ ಶ್ರವಣಬೆಳಗೊಳ ನಿವಾಸಿ ಗಂಗಮ್ಮ (65) ಕೊಲೆಯಾದ ಮಹಿಳೆ. ಇವರ ಪುತ್ರ ಉಮಾಶಂಕರ್ (40) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಳೆದ ಒಂದು ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಸ್ ಆಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಮಾಶಂಕರ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಈ ಕಾರಣದಿಂದ ಆತ ಆಗಾಗ ಮಾನಸಿಕ ಸ್ಥಿಮಿತ ಕಳೆದುಕೊಂಡವನಂತೆ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ.
ಆರೋಪಿ ಉಮಾಶಂಕರ್ ತನಗೆ ಮದುವೆ ಮಾಡಿಸುವಂತೆ ತಾಯಿ ಗಂಗಮ್ಮ ಅವರೊಂದಿಗೆ ಪದೇ ಪದೇ ಜಗಳವಾಡುತ್ತಿದ್ದನು. ಅದರಂತೆ ಮಾರ್ಚ್ 26ರಂದು ಕೂಡ ಮದುವೆ ವಿಚಾರವಾಗಿ ತಾಯಿಯೊಂದಿಗೆ ಜಗಳ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು, ಆಕ್ರೋಶಗೊಂಡ ಉಮಾಶಂಕರ್ ಮೊದಲು ಕೈನಿಂದ ತಾಯಿಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ಪೆಟ್ಟಿನ ರಭಸಕ್ಕೆ ಗಂಗಮ್ಮ ಅವರು ನೆಲಕ್ಕೆ ಕುಸಿದು ಬಿದ್ದಾಗ, ಅವರ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಗಂಗಮ್ಮ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ನಾಲ್ಕು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಅವರು, ಮಾರ್ಚ್ 30ರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.