ಹಾಸನ, ಏಪ್ರಿಲ್ 29: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ ಮಗು ಸಾವನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಲ್ಲನಘಟ್ಟ ಬಳಿ ನಡೆದಿದೆ.

ಬೆಂಗಳೂರಿನ ದೇವನಹಳ್ಳಿ ನಿವಾಸಿಗಳಾದ ಪ್ರಿಯಾಂಕ (30) ಹಾಗೂ ಅವರ ಪುತ್ರ ವೈಭವ್ (1.5 ವರ್ಷ) ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಕಾರಿನಲ್ಲಿದ್ದ ಮಂಜುನಾಥ್, ಚಂದನ್, ದಿಲೀಪ್ ಹಾಗೂ ದೇವರಾಜು ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವನಹಳ್ಳಿಯಿಂದ ಮಂಜುನಾಥ್ ಮತ್ತು ಅವರ ಕುಟುಂಬ ಸದಸ್ಯರು ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದರು. ಕ್ಷೇತ್ರ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದಾಗ ಮಲ್ಲನಘಟ್ಟ ಗ್ರಾಮದ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನಿಗೆ ನಿದ್ರೆಯ ಮಂಪರು ಬಂದಿದ್ದೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ನಿಯಂತ್ರಣ ತಪ್ಪಿದ ಕಾರು ಹೇಮಾವತಿ ನಾಲೆಯೊಳಗೆ ಬಿದ್ದಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಮೂಲಕ ನಾಲೆಯಿಂದ ಕಾರನ್ನು ಮೇಲೆತ್ತಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.