ಮಂಗಳೂರು ಫೆಬ್ರವರಿ 23: ಬೇಸಿಗೆ ಕಾಲ ಪ್ರಾರಂಭದಲ್ಲೇ ಈ ಬಾರಿ ಬಿಸಿಲ ದಗೆ ಜಾಸ್ತಿಯಾಗಿದೆ. ರಾಜ್ಯದಲ್ಲಿ ಈ ಬಾರಿ ಬಿಸಿಲು ಜೋರಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಫೆಬ್ರವರಿ ಮುಕ್ತಾಯಗೊಂಡಿಲ್ಲ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಏರಲಾರಂಭಿಸಿದೆ. ಮುಂದಿನ ಮೂರು ತಿಂಗಳು (ಮಾರ್ಚ್, ಏಪ್ರಿಲ್, ಮೇ) ಉಷ್ಣಾಂಶ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರಮುಖವಾಗಿ, ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬಿಸಿಲು ಹೆಚ್ಚಿರಲಿದೆ ಎಂದು ಐಎಂಡಿ ( India Meteorological Department) ಮಾಹಿತಿಯನ್ನು ನೀಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮೇ ಅಂತ್ಯದವರೆಗೆ ರಾಜ್ಯದಲ್ಲಿ ಬಿಸಿಲ ದಗೆ ಜಾಸ್ತಿ ಇರಲಿದೆ. ದಕ್ಷಿಣ ಭಾರತದ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಕೆಲವು ಭಾಗಗಳನ್ನು ಹೊರತು ಪಡಿಸಿ, ಭಾರತದ ಬಹುತೇಕ ಹೆಚ್ಚಿನ ಕಡೆ, ಮಾರ್ಚ್ – ಮೇ 2026ರ ಅವಧಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತೆ ಹೆಚ್ಚಿರಲಿದೆ.
ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಕರ್ನಾಟಕದಲ್ಲಿ, ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ, ರಾತ್ರಿಯ ಹೊತ್ತಿಗೂ ಇದು ಮುಂದುವರಿಯಲಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನವು, ಶೇ. 65- 75ಕ್ಕಿಂತ ಹೆಚ್ಚಲಿದೆ ಎಂದು ಐಎಂಡಿ ತನ್ನ ಲೇಟೆಸ್ಟ್ ವರದಿಯಲ್ಲಿ ಉಲ್ಲೇಖಿಸಿದೆ. ಉತ್ತರ ಒಳನಾಡಿನ ಬಹುತೇಕ ಕಡೆ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಿರಲಿದೆ.