ಹೊಳೆಹೊನ್ನೂರು, ಆಗಸ್ಟ್ 21: ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದ ಹೃದಯ ಭಾಗದಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆಗೆ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ.
ಘಟನೆಯಿಂದ ಹೊಳೆಹೊನ್ನೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ ಹಾಗೂ ದುಷ್ಕರ್ಮಿಗಳ ಪತ್ತೆಗೆ ಆಗ್ರಹಿಸಿ ಗ್ರಾಮಸ್ಥರು ಬೆಳಿಗ್ಗೆಯಿಂದಲೂ ರಾಷ್ಟ್ರೀಯ ಹೆದ್ದಾರಿ 13 ಬಂದ್ ಮಾಡಿದ್ದಾರೆ. ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಶಿವಮೊಗ್ಗ-ಚನ್ನಗಿರಿ-ಚಿತ್ರದುರ್ಗ ನಡುವೆ ವಾಹನ ಸಂಚಾರ ಬಂದ್ ಆಗಿದೆ. ಪಟ್ಟಣದ ಹೊರವಲಯದ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿವೆ.
ಪ್ರತಿಮೆಗೆ ಹಾನಿಗೀಡಾಗಿರುವ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚ ತಜ್ಞರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ, ಸ್ಥಳಕ್ಕೆ ಭೇಟಿ ನೀಡಿದ್ದಾರೆ. ‘ಇದು ಪ್ರಜಾಪ್ರಭುತ್ವ ದಲ್ಲಿ ಅತ್ಯಂತ ಹೇಯ ಕೃತ್ಯ’ ಎಂದು ಸ್ಥಳದಲ್ಲಿದ್ದ ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಮುಖಂಡ ಉಮೇಶ್ ಆಕ್ರೋಶ ವ್ಯಕ್ತಪಡಿಸಿದರು.