ಕುಂದಾಪುರ/ತೀರ್ಥಹಳ್ಳಿ: ಮೇ ತಿಂಗಳ ಅಂತ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮಣ್ಣು ಕುಸಿತಕ್ಕೆ ಒಳಗಾಗಿದ್ದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೇ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಬಸ್ ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಹೆದ್ದಾರಿ 52ರ ಬಾಳೆಬರೇ ಘಾಟ್ ಸರಪಳಿ 42.10 ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ತಿಂಗಳ ಕೊನೆಯಲ್ಲಿ ಸುರಿದ ಸುರಿದ ಮುಂಗಾರು ಪೂರ್ವ ಮಳೆಗೆ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣು ಕುಸಿದಿತ್ತು. ರಸ್ತೆ ಸಂಪೂರ್ಣ ದುರ್ಬಲಗೊಂಡಿದ್ದರಿಂದ ವಾಹನ ಸವಾರರ ಸುರಕ್ಷತೆಯ ಹಿತದೃಷ್ಟಿಯಿಂದ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಈ ಹಿಂದೆ ಆದೇಶ ಹೊರಡಿಸಲಾಗಿತ್ತು.
ಪ್ರಸ್ತುತ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್ ಪಿನ್ ತಿರುವಿನ ಭಾಗಶಃ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಯುದ್ಧೋಪಾದಿಯಲ್ಲಿ ತಡೆಗೋಡೆಯನ್ನು ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ನಿರ್ಮಿಸಲಾಗಿದೆ. ಅಲ್ಲದೆ, ರಸ್ತೆಯ ಕುಸಿದ ಭಾಗದಲ್ಲಿ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ಸಂಚಾರ ಯೋಗ್ಯವನ್ನಾಗಿ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿಗಳ ಆದೇಶದ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆಯ ಉಡುಪಿ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ಮಣಿಪಾಲದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ (RTO) ಜಂಟಿ ಪರಿಶೀಲನಾ ವರದಿ ಪಡೆಯಲಾಗಿತ್ತು. ಉಡುಪಿ ಜಿಲ್ಲಾ ವ್ಯಾಪ್ತಿಯ ಬಾಳಬರೇ ಘಾಟ್ ಸರಪಳಿ 44.60 ರಿಂದ 53.00 ರ ವರೆಗಿನ ರಸ್ತೆಯು ಲೋಕೋಪಯೋಗಿ ಇಲಾಖೆ ಕುಂದಾಪುರ ಉಪವಿಭಾಗ ವ್ಯಾಪ್ತಿಗೆ ಒಳಪಟ್ಟಿದ್ದು, ಇಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ಸುಗಳು, ಲಘು ಸರಕು ಸಾಗಣೆ (ಗೂಡ್ಸ್) ವಾಹನಗಳು ಹಾಗೂ ಕಾರುಗಳ ಸಂಚಾರಕ್ಕೆ ಅನುವು ಮಾಡಿಕೊಡಬಹುದು ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದರು.
ಈ ವರದಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ನಿಯಮ 115 ಹಾಗೂ 116 ರನ್ವಯ ಈ ಹಿಂದೆ ವಾಹನ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್, ಲಘು ವಾಹನಗಳು ಹಾಗೂ ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಮುಕ್ತ ಅವಕಾಶ ಕಲ್ಪಿಸಿದೆ.