LATEST NEWS
ಅಕ್ರಮ ಗೋಸಾಗಾಟಕ್ಕೆ ಯತ್ನ ಇಬ್ಬರು ಆರೋಪಿಗಳ ಬಂಧನ
ಉಡುಪಿ: ಅಕ್ರಮವಾಗಿ ಗೋವು ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೈಂದೂರು ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 16 ಎತ್ತುಗಳನ್ನು ರಕ್ಷಿಸಲಾಗಿದೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ನಜೀರುಲ್ಲ (43) ಮತ್ತು ಮೈಸೂರಿನ ರಾಘವೇಂದ್ರ (25) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನೋಂದಣಿ ಸಂಖ್ಯೆಯ (ಕೆಎ 19 ಎ 1801) 10 ಚಕ್ರದ ಲಾರಿಯಲ್ಲಿ 18 ಎತ್ತುಗಳನ್ನು ಮಾರಣಾಂತಿಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದರು. ಸಾಗಾಟದ ವೇಳೆ ಎರಡು ಎತ್ತುಗಳು ಸಾವನ್ನಪ್ಪಿದ್ದು, ಉಳಿದ 16 ಎತ್ತುಗಳನ್ನು ರಕ್ಷಿಸಲಾಗಿದೆ.
ಖಚಿತ ಮಾಹಿತಿಯ ಆಧಾರದಲ್ಲಿ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಕೆ. ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಅವರ ನೇತೃತ್ವದ ತಂಡವು ತ್ರಾಸಿ ಮರವಂತೆಯ ಬಳಿ ಈ ಕಾರ್ಯಾಚರಣೆ ನಡೆಸಿದೆ. ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಆರೋಪಿಗಳ ವಾಹನ ಬಿಟ್ಟು ಓಡಿ ಹೋಗಿದ್ದಾರೆ. ಅವರನ್ನು ಬೆನ್ನಟ್ಟಿ ಬಂಧಿಸಿದ್ದು, ಬಿಟ್ಟು ಹೋದ ವಾಹನವನ್ನು ಮುಟ್ಟುಗೋಲು ಹಾಕಿದ್ದಾರೆ.
ಅಕ್ರಮ ಗೋ ಸಾಗಾಟ ವಾಹನವು ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಾಸರಗೋಡಿನ ಚೇರ್ಕಳಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ 2020ರನ್ವಯ ಪ್ರಕರಣ ದಾಖಲಾಗಿದೆ.
You must be logged in to post a comment Login