LATEST NEWS
ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನ
ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನ
ಮಂಗಳೂರು ಜುಲೈ 4: ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ವೋಲ್ಪೋ ಬಸ್ ನಲ್ಲಿ ಬರುತ್ತಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದಾರೆ. ಆದರೆ ಹೃದಯಾಘಾತದಿಂದಾಗಿ ಬಸ್ ನಲ್ಲಿಯೇ ಅವರು ಮೃತರಾಗಿದ್ದಾರೆ.
ಉಡುಪಿ ಜಿಲ್ಲೆ ಹೆಬ್ರಿ ನಿವಾಸಿಯಾಗಿರುವ ಇವರು 1952 ಜುಲೈ 5 ರಂದು ಜನಿಸಿದ್ದರು. ಹೆಬ್ರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ರಾಜಕೀಯ ಪ್ರವೇಶ ಮಾಡಿದ್ದ ಇವರು, ಯಾವುದೇ ಜಾತಿ ಬಲ, ಹಣ ಬಲ ಇಲ್ಲದೆ 1998 ಮತ್ತು 2008ರಲ್ಲಿ ಕಾರ್ಕಳದಲ್ಲಿ ಎರಡು ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ವಿರುದ್ಧ ಸೋಲು ಕಂಡಿದ್ದರು. ಒಂದು ಅವಧಿಗೆ ಹೆಬ್ರಿ ಬ್ಲಾಕ್ ಅಧ್ಯಕ್ಷರಾಗಿದ್ದರು. ಸದ್ಯ ಕೆಪಿಸಿಸಿ ಕಾರ್ಯದರ್ಶಿ ಆಗಿದ್ದರು.
ಶಾಸಕರಾಗಿದ್ದಾಗಲೂ ಇವರು ಬಸ್ನಲ್ಲೇ ಓಡಾಡುತ್ತಿದ್ದರು. ವೆನ್ಲಾಕ್ ಆಸ್ಪತ್ರೆಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಸುನಿಲ್ ಕುಮಾರ್, ನಗರಾಭಿವೃದ್ದಿ ಸಚಿವ ಯುಟಿ ಖಾದರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇಂದು ಬೆಳಗ್ಗೆ 9 ಗಂಟೆಗೆ ಹುಟ್ಟೂರು ಹೆಬ್ರಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ದು ಅಂತ್ಯಕ್ರಿಯೆ ನಡೆಸಲಾಗುತ್ತದೆ.
You must be logged in to post a comment Login