LATEST NEWS
ಕಾರ್ಕಳ – ಪರುಶುರಾಮ್ ಥೀಮ್ ಪಾರ್ಕ್ ವಿರುದ್ದ ಮುತಾಲಿಕ್ ಅರ್ಜಿ ವಜಾ….!!

ಕಾರ್ಕಳ ಅಕ್ಟೋಬರ್ 12: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲ ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಶ್ರೀ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಯೋಜನೆ ಕೈಬಿಡಲು ಹಾಗೂ ಯೋಜನೆಯ ಕಳಪೆ ಗುಣಮಟ್ಟದ ಕಾಮಗಾರಿ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲು ಸರ್ಕಾರಕ್ಕೆ ಆದೇಶಿಸುವಂತೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ಪಿ.ಬಿ. ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಯೋಜನೆ ಈಗಾಗಲೇ ಪೂರ್ಣಗೊಳ್ಳುವ ಹಂತದಲ್ಲಿದೆ. ಇದೀಗ ಅರ್ಜಿದಾರರು ಏಕಾಏಕಿ ಎಚ್ಚರಗೊಂಡು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅರ್ಜಿ ಸಲ್ಲಿಕೆಯಲ್ಲಿ ಸಾಕಷ್ಟು ವಿಳಂಬ ಮಾಡಲಾಗಿದೆ. ಅತಿಯಾದ ಊಹೆ ಮತ್ತು ಪೂರ್ವಪೀಡಿತ ಭಾವನೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಆಕ್ಷೇಪಿಸಿತು.

ಗೋಮಾಳದಲ್ಲಿ ಥೀಮ್ ಪಾರ್ಕ್ ನಿರ್ಮಿಸುತ್ತಿರುವುದರಿಂದ ದನಕರುಗಳನ್ನು ಮೇಯಿಸಲು ಕಷ್ಟವಾಗುತ್ತಿದೆ ಎಂಬ ಬಗ್ಗೆ ಯಾವುದೇ ವ್ಯಕ್ತಿ ಅಥವಾ ಗ್ರಾಮದ ನಿವಾಸಿಯಿಂದ ಆಕ್ಷೇಪ ವ್ಯಕ್ತವಾಗಿಲ್ಲ, ಥೀಮ್ ಪಾರ್ಕ್ನಲ್ಲಿ ಕೆಲಸ ಗುಣಮಟ್ಟ ಸರಿಯಿಲ್ಲ ಎಂಬುದು ಅರ್ಜಿದಾರರ ಆಕ್ಷೇಪವಾಗಿದೆ. ಆದರೆ, ಸ್ಥಳೀಯ ಗ್ರಾಮಗಳ ಜನರಿಗೆ ನಿರ್ಮಾಣ ಕಾಮಗಾರಿ ತೊಂದರೆ ಉಂಟು ಮಾಡಲಿದೆ ಎನ್ನುವುದು ಅರ್ಜಿದಾರರ ಅಹವಾಲು ಆಗಿಲ್ಲ ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.
ಪ್ರಕರಣದ ಹಿನ್ನೆಲೆ : ಪರಶುರಾಮ್ ಥೀಮ್ ಪಾರ್ಕ್ ನಿರ್ಮಾಣಕ್ಕೆ ನಿಗದಿ ಪಡಿಸಿರುವ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೇ ಸಂಖ್ಯೆ 396/1ರಲ್ಲಿನ 1.58 ಎಕರೆಯು ಗೋಮಾಳ ಜಮೀನು ಆಗಿದೆ. ಗೋಮಾಳದಲ್ಲಿ ಪಾರ್ಕ್ ನಿರ್ಮಾಣ ಮಾಡಲು ಸರ್ಕಾರದ ತೆರಿಗೆ ಹಣ ವ್ಯಯಿಸಲಾಗುತ್ತಿದೆ. ಇದರಿಂದ ಯಾವುದೇ ಉದ್ದೇಶ ಈಡೇರುವುದಿಲ್ಲ. ಕಾಮಗಾರಿ ಸಹ ಕಳಪಟೆ ಗುಣಮಟ್ಟದಿಂದ ಕೂಡಿದೆ. ಆದ್ದರಿಂದ ಯೋಜನೆಯನ್ನು ಕೈಬಿಡಬೇಕು. ಕಳಪೆ ಗುಣಮಟ್ಟ ಕಾಮಗಾರಿ ನಡೆಸಿರುವ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲು ಸರ್ಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.