ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ – ಕೇಂದ್ರಕ್ಕೆ ರಾಜ್ಯ ಸರ್ಕಾರದ ಪತ್ರ
02/03/2026
ಬೆಂಗಳೂರು, ಮಾರ್ಚ್ 02: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ನಡೆಸುತ್ತಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಕುರಿತು ವಿಕ್ರಂ ಮಿಸ್ರಿ ಅವರಿಗೆ ಪತ್ರ ಬರೆದಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪಶ್ಚಿಮ ಏಷ್ಯಾ ದೇಶಗಳಲ್ಲಿ ಉಂಟಾಗಿರುವ ಭೌಗೋಳಿಕ-ರಾಜಕೀಯ ಬೆಳವಣಿಗೆಗಳು ಹಾಗೂ ಹೆಚ್ಚುತ್ತಿರುವ ಸೇನಾ ಚಟುವಟಿಕೆಗಳಿಂದ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಗಮನ ಸೆಳೆದಿದ್ದಾರೆ.
ನಾಗರಿಕರ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದ್ದು, ವಾಯು ಗಡಿ ನಿರ್ಬಂಧಗಳ ಪರಿಣಾಮವಾಗಿ ವಿಮಾನಯಾನ ಸೇವೆಗಳು ವ್ಯತ್ಯಯಗೊಂಡಿವೆ. ಇದರಿಂದ ಅಲ್ಲಿನ ಭಾರತೀಯ ಸಮುದಾಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಭಾರತೀಯರ ಸುರಕ್ಷತೆ ಮತ್ತು ವಾಪಸಿ ವ್ಯವಸ್ಥೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಇದೇ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ ಅವರಿಗೆ ಕೂಡ ಪತ್ರ ರವಾನಿಸಲಾಗಿದೆ.
ಪತ್ರದಲ್ಲಿ ಯುದ್ಧದ ಪರಿಸ್ಥಿತಿಯಿಂದಾಗಿ ವಿಮಾನಯಾನ ಸೇವೆಗಳು ವ್ಯತ್ಯಯಗೊಂಡಿರುವುದರಿಂದ ವಾಪಸ್ ಟಿಕೆಟ್ ಬುಕ್ ಮಾಡಿಕೊಂಡಿದ್ದ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಮಾರ್ಚ್ 2ರವರೆಗೆ ಕೆಲವು ಪ್ರದೇಶಗಳಲ್ಲಿ ವಿಮಾನ ಸೇವೆಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿ ಸಹಜವಾಗುತ್ತಿದ್ದಂತೆಯೇ ಕನ್ನಡಿಗರು ಸೇರಿದಂತೆ ದೇಶದ ನಾಗರಿಕರನ್ನು ಸುರಕ್ಷಿತವಾಗಿ ವಾಪಸು ಕಳುಹಿಸಲು ವಿಶೇಷ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.
ಉದ್ಯೋಗ, ಉನ್ನತ ಶಿಕ್ಷಣ, ವ್ಯವಹಾರ, ಪ್ರವಾಸ ಹಾಗೂ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಪಶ್ಚಿಮ ಏಷ್ಯಾ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಆತಂಕದಲ್ಲಿದ್ದಾರೆ. ಭಾರತೀಯ ರಾಯಭಾರ ಕಚೇರಿಗಳು ಮತ್ತು ಕಾನ್ಸುಲೇಟ್ ಕಚೇರಿಗಳ ಮೂಲಕ ಅವರ ಸುರಕ್ಷತೆ ಖಚಿತಪಡಿಸಬೇಕು ಎಂದು ರಾಜ್ಯ ಸರ್ಕಾರ ಒತ್ತಾಯಿಸಿದೆ.
ಕರ್ನಾಟಕ ಸೇರಿದಂತೆ ಭಾರತದ ವಿವಿಧ ರಾಜ್ಯಗಳ ನಾಗರಿಕರನ್ನು ಆದ್ಯತೆ ಆಧಾರದ ಮೇಲೆ ತಾಯ್ನಾಡಿಗೆ ಕರೆತರಲು ಅಗತ್ಯ ವಿಮಾನಯಾನ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.