ತೀವ್ರ ಜ್ವರಕ್ಕೆ ಇಬ್ಬರು ಕಂದಮ್ಮಗಳು ಬಲಿ
ಮಂಗಳೂರು ಜುಲೈ 25: ತೀವ್ರ ಜ್ವರ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೇರಳ ಮೂಲದ ಇಬ್ಬರು ಕಂದಮ್ಮಗಳು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತ ಮಕ್ಕಳನ್ನು ಸಿಧ್ರಾತುಲ್ ಮುನ್ತಾಹ (8) ಮತ್ತು ಸೋದರಿ 6 ತಿಂಗಳ ಮಗು ಶಿನಾಜ್ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡು ಜಿಲ್ಲೆಯ ಬದಿಯಡ್ಕ ಕನ್ಯಾಪಡಿಯ ಸಿದ್ದಿಕ್ ಮತ್ತು ನಿಶಾ ದಂಪತಿಯ ಮಕ್ಕಳು.
ಈ ಎರಡು ಕಂದಮ್ಮಗಳು ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದರ ಎಂದು ಹೇಳಲಾಗಿದ್ದು, ಈ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದ ಮುನ್ತಾಹ ಮಂಗಳವಾರ ಮೃತಪಟ್ಟಿದ್ದಾನೆ. ಇನ್ನೊಂದು ಮಗು ಶಿನಾಜ್ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾಳೆ.
ಮಕ್ಕಳ ತಾಯಿ ನಿಶಾ ಕೂಡ ಈಗ ಅದೇ ಆಸ್ಪತ್ರೆಯಲ್ಲಿ ಜ್ವರದಿಂದ ದಾಖಲಾಗಿದ್ದಾರೆ ಎಂದು ಕುಟುಂಬ ತಿಳಿಸಿದೆ. ಈ ಪ್ರಕರಣಗಳ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಜ್ವರಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಜಿಲ್ಲಾ ವೈದ್ಯಕೀಯ ಅಧಿಕಾರಿ ನೇತೃತ್ವದ ವೈದ್ಯರ ತಂಡ ಈ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದರು.



